ಮೈಸೂರು: ವಿದ್ಯುತ್ ವಿತರಣಾ ವ್ಯವಸ್ಥೆಯ ಖಾಸಗೀಕರಣಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿರೋಧ ವ್ಯಕ್ತಪಡಿಸಿದೆ.
ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಉದ್ದೇಶಿತ ತಿದ್ದುಪಡಿ ಕಾಯ್ದೆಯನ್ನು ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸಿದರು.
ಇಡೀ ವಿದ್ಯುತ್ ಕ್ಷೇತ್ರವನ್ನೇ ಖಾಸಗಿಯವರಿಗೆ ಒಪ್ಪಿಸುವ ಷಡ್ಯಂತ್ರ ಇದರ ಹಿಂದಿದೆ. ತಿದ್ದುಪಡಿಯಿಂದ ರೈತರು ಹಾಗೂ ಬಡವರಿಗೆ ತೊಂದರೆಯಾಗಲಿದೆ. ಹೀಗಾಗಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ತಿದ್ದುಪಡಿಯನ್ನು ಒಪ್ಪಬಾರದು ಎಂದು ಆಗ್ರಹಿಸಿದರು.
ಒಂದು ವೇಳೆ ತಿದ್ದುಪಡಿ ಜಾರಿಗೆ ಬಂದರೆ ರಾಜ್ಯದ 22 ಲಕ್ಷದ ಪಂಪ್ಸೆಟ್ದಾರರು ಬೀದಿಗಿಳಿದು ಹೋರಾಟಕ್ಕೆ ಇಳಿಯುತ್ತಾರೆ ಎಂದು ಎಚ್ಚರಿಕೆ ನೀಡಿದ ಅವರು, ಕೊನೆಯ ಹಂತದಲ್ಲಿ ಶಾಂತಿಯುತವಾಗಿ ಅಸಹಕಾರ ಚಳವಳಿಯನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈಗಾಗಲೇ ಬಹುತೇಕ ಎಲ್ಲ ರಂಗಗಳನ್ನು ಖಾಸಗೀಕರಣ ಮಾಡಿದ್ದಾರೆ. ಸಂಸತ್ತು ಮತ್ತು ವಿಧಾನಸಭೆಗಳನ್ನು ಖಾಸಗೀಕರಣ ಮಾಡುವುದು ಯಾವಾಗ ಎಂದು ಅವರು ಪ್ರಶ್ನಿಸಿದರು.
ಮಿಡತೆಗಳು ರಾಜ್ಯದ ಹೊಲಗಳಿಗೆ ದಾಳಿ ಮೊದಲು ರಾಜ್ಯ ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಚಾಮರಾಜನಗರ ಮತ್ತು ಗುಂಡ್ಲುಪೇಟೆ ಭಾಗಗಳಲ್ಲಿ ಸಣ್ಣ ಈರುಳ್ಳಿಯು ರೋಗಕ್ಕೆ ತುತ್ತಾಗಿದೆ. ಇದರಿಂದ ಬೆಳೆಗಾರರು ನಷ್ಟ ಅನುಭವಿಸುವಂತಾಗಿದೆ. ಸರ್ಕಾರ ಕೂಡಲೇ ಇವರ ನೆರವಿಗೆ ಧಾವಿಸಬೇಕು ಎಂದು ಅವರು ಆಗ್ರಹಿಸಿದರು.
ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಹೊಸೂರು ಕುಮಾರ್, ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು ಇದ್ದರು.