ಶಿಕಾರಿಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಆಡಳಿತದಲ್ಲಿ ಅತಿಥಿ ಉಪನ್ಯಾಸಕರಿಗೆ ಹಾಗೂ ನೌಕರರಿಗೆ ಸುರಕ್ಷತೆ ಇಲ್ಲದಂತಾಗಿದೆ ಎಂದು ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯನೂರು ಮಂಜುನಾಥ ಟೀಕಿಸಿದರು.
ಪಟ್ಟಣದಲ್ಲಿ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ 6ನೇ ವೇತನ ಆಯೋಗ ಮಾಡಿರುವ ಶಿಫಾರಸನ್ನು ಜಾರಿ ಮಾಡಿದೆ. ಆದರೆ, ಮೇಲ್ನೋಟಕ್ಕೆ ಶೇ 30ರಷ್ಟು ವೇತನ ಏರಿಕೆಯಾದಂತೆ ಕಂಡುಬಂದರೂ ವಾಸ್ತವದಲ್ಲಿ
ಶೇ 7ರಷ್ಟು ಮಾತ್ರ ಹೆಚ್ಚಿನ ವೇತನವನ್ನು ನೌಕರರು ಪಡೆಯಲಿದ್ದಾರೆ ಎಂದು ಹೇಳಿದರು.
ಸಂಸದ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನೌಕರರ ಪರವಾದ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಬಿಜೆಪಿ ಆಡಳಿತದಲ್ಲಿ ಶೈಕ್ಷಣಿಕ ಕ್ಷೇತ್ರ, ನೌಕರರ ಹಾಗೂ ಪದವೀಧರರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿತ್ತು. ವಿಧಾನಸಭೆ ಚುನಾವಣೆ ನಂತರ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ನೌಕರರ ಹಾಗೂ ಪದವೀಧರರ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.
ಶಾಸಕ ಬಿ.ವೈ.ರಾಘವೇಂದ್ರ ಮಾತನಾಡಿ, ‘ಲೋಕಸಭಾ ಹಾಗೂ ರಾಜ್ಯಸಭೆ ಸದಸ್ಯರಾಗಿ, ಜಿಲ್ಲೆಯ ಧ್ವನಿಯಾಗಿ ಆಯನೂರು ಮಂಜುನಾಥ ಕಾರ್ಯನಿರ್ವಹಿಸಿದ್ದಾರೆ. ಪದವೀಧರರ ಧ್ವನಿಯಾಗಲು ಪಕ್ಷ ಅವಕಾಶ ಒದಗಿಸಿದೆ. ಪದವೀಧರರು ಹಾಗೂ ನೌಕರರನ್ನು ಗೌರವದಿಂದ ಬಿಜೆಪಿ ನಡೆಸಿಕೊಂಡಿದ್ದು, ಆಯನೂರು ಮಂಜುನಾಥಹಾಗೂ ಗಣೇಶ್ ಕಾರ್ಣಿಕ್ ಅವರನ್ನು ಗೆಲ್ಲಿಸಲು ಶ್ರಮಿಸಬೇಕು’ ಎಂದು ಕರೆ ನೀಡಿದರು.
ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಗುರುಮೂರ್ತಿ ಮಾತನಾಡಿ, ‘ಆಯನೂರು ಮಂಜುನಾಥ ಅವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಂಘಟನೆಯಲ್ಲಿ, ಕಾರ್ಮಿಕ ನಾಯಕರಾಗಿ ಹಾಗೂ ಬಗರ್ಹುಕುಂ ಸಾಗುವಳಿದಾರರ ಪರ ಹೋರಾಟ ನಡೆಸಿದ್ದಾರೆ. ಹೋರಾಟದ ವ್ಯಕ್ತಿತ್ವವನ್ನು ಬೆಳೆಸಿಕೊಂಡಿದ್ದಾರೆ. ಪದವೀಧರರ ಕ್ಷೇತ್ರಕ್ಕೆ ಸ್ಪರ್ಧಿಸಿದ ಮಂಜುನಾಥ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದರು.