ಮೈಸೂರು: ಉತ್ತರ ಪ್ರದೇಶ ರಾಜ್ಯದ ಹತ್ರಾಸ್ನಲ್ಲಿ ಪರಿಶಿಷ್ಟ ಜಾತಿಯ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ಅಖಿಲ ಭಾರತೀಯ ಮಹಿಳಾ ಸಾಂಸ್ಕೃತಿಕ ಸಂಘಟನೆ, ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್, ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ಸ್ ಆರ್ಗನೈಸೇಷನ್ ಪ್ರತಿಭಟನೆ ನಡೆಸಿದವು.
ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಸೇರಿದ ವಿವಿಧ ಸಂಘಟನೆಗಳ ಸದಸ್ಯರು, ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.
‘ದೇಶದಲ್ಲಿನ ಮಹಿಳೆಯರ ಶೋಚ ನೀಯ ಮತ್ತು ವಾಸ್ತವ ಪರಿಸ್ಥಿತಿಯನ್ನು ಇಂಥ ಕೃತ್ಯಗಳು ಪದೇಪದೇ ಬಿಚ್ಚಿಡುತ್ತಿವೆ. ಇದೊಂದು ಕರಾಳ ದಿನ. ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ಉತ್ತರ ಪ್ರದೇಶ ಸರ್ಕಾರ ಮಹಿಳೆಯರು ಹಾಗೂ ಮಕ್ಕಳಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗುತ್ತಿವೆ.ಭಾರತೀಯ ಸಂಸ್ಕೃತಿಯ ಹರಿಕಾರರು ಎಂದು ಹೇಳಿಕೊಳ್ಳುವವರು ಮಹಿಳೆಯರ ಬಗ್ಗೆ ಯಾವುದೇ ರೀತಿಯ ಕಾಳಜಿ ಹೊಂದಿಲ್ಲ’ ಎಂದು ಪ್ರತಿಭಟನಕಾರರು ಹರಿಹಾಯ್ದರು.
‘ಮೃಗೀಯ ವರ್ತನೆಯನ್ನು ಎಲ್ಲರೂ ಖಂಡಿಸಬೇಕು. ಜನರ ರಕ್ಷಣೆ ಮಾಡಬೇಕಾದ ಪೊಲೀಸರೇ ಅಪರಾಧಿಗಳೊಂದಿಗೆ ನಿಂತಿರುವುದು ಅತ್ಯಂತ ನೋವು ತರಿಸುವ ವಿಚಾರ. ಈ ಪ್ರಕರಣವನ್ನು ತ್ವರಿತಗತಿಯ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಅಶ್ಲೀಲ ಸಿನಿಮಾ, ಸಾಹಿತ್ಯ, ಡ್ರಗ್ಸ್, ಮದ್ಯವನ್ನು ನಿಷೇಧಿಸಬೇಕು’ ಎಂದು ಅವರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಐಎಂಎಸ್ಎಸ್ ರಾಜ್ಯ ಉಪಾಧ್ಯಕ್ಷೆ ಪಿ.ಎಸ್.ಸಂಧ್ಯಾ, ಜಿಲ್ಲಾ ಕಾರ್ಯದರ್ಶಿ ಸೀಮಾ, ಎಐಡಿವೈಒ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್, ಸುನೀಲ್, ಕಲಾವತಿ, ಎಐಡಿಎಸ್ಒನ ಆಸಿಯಾ ಬೇಗಂ, ಚಂದ್ರಕಲಾ ಇದ್ದರು.
ಏಕಾಂಗಿ ಧರಣಿ: ಯುವತಿ ಅತ್ಯಾಚಾರ ಖಂಡಿಸಿ ಮೈಸೂರು ನಾಯ ಕರ ವೇದಿಕೆಯ ಪಡುವಾರಹಳ್ಳಿ ರಾಮಕೃಷ್ಣ ಏಕಾಂಗಿ ಧರಣಿ ನಡೆಸಿದರು. ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ ಯುವತಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿದರು.