ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ಜಿಲ್ಲೆಯಲ್ಲಿ ಎಲ್ಲರಿಗೂ ಲಸಿಕೆ: ಎಸ್.ಟಿ.ಸೋಮಶೇಖರ್ ಭರವಸೆ

‘ವೈದ್ಯರ ನಡೆ ಹಳ್ಳಿಯ ಕಡೆ‌’ ಕಾರ್ಯಕ್ರಮ ಯಶಸ್ವಿ
Last Updated 15 ಜೂನ್ 2021, 13:32 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯ ಎಲ್ಲರಿಗೂ ಕೋವಿಡ್ ಲಸಿಕೆ ದೊರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭರವಸೆ ನೀಡಿದರು.‌

ಇಲ್ಲಿನ ಸುತ್ತೂರು ಮಠಕ್ಕೆ ಮಂಗಳವಾರ ಭೇಟಿ ನೀಡಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.

ಲಸಿಕೆಯನ್ನು ನೀಡುವುದರಲ್ಲಿ ರಾಜ್ಯದಲ್ಲಿಯೇ ಮೈಸೂರು ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಪೂರ್ಣ ಪ್ರಮಾಣದಲ್ಲಿ ಎಲ್ಲರಿಗೂ ಲಸಿಕೆ ನೀಡಲು ಜಿಲ್ಲಾ ವೈದ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಜೂನ್ 21ರಿಂದ 18ರಿಂದ 44 ವರ್ಷದ ಎಲ್ಲರಿಗೂ ಲಸಿಕೆ ನೀಡಲು ಘೋಷಣೆಯಾಗಿರುವುದರಿಂದ ಆದಷ್ಟು ಬೇಗ ಲಸಿಕೆ ಎಲ್ಲರಿಗೂ ಸಿಗಲಿದೆ ಎಂದು ತಿಳಿಸಿದರು.

‘ವೈದ್ಯರ ನಡೆ ಹಳ್ಳಿಯ ಕಡೆ‌’ ಕಾರ್ಯಕ್ರಮವು ಯಶಸ್ವಿಯಾಗಿದ್ದು, ಮೊದಲ ಹಂತ ಪೂರ್ಣಗೊಂಡಿದೆ. 2ನೇ ಹಂತಕ್ಕೆ ಮುಖ್ಯಮಂತ್ರಿಗಳು ಅನುಮತಿ ಕೊಟ್ಟ ನಂತರ ಬಹುತೇಕ ಎಲ್ಲ ಕಡೆ ವೈದ್ಯರು ಹೋಗುತ್ತಿರುವುದರಿಂದ ಕೊರೊನಾ ಪರೀಕ್ಷೆಯ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಈ ವಾರದಲ್ಲಿಯೇ 2ನೇ ಹಂತವೂ ಮುಕ್ತಾಯವಾಗಲಿದೆ ಎಂದು ಹೇಳಿದರು.

ರಾಜ್ಯಸರ್ಕಾರದ ಹಣಕಾಸು ಸ್ಥಿತಿಯ ಹೇಗೇ ಇದ್ದರೂ, ಕೋವಿಡ್‌ನಿಂದ ಕುಟುಂಬದ ಸದಸ್ಯರನ್ನು ಕಳೆದುಕೊಂಡ ಬಿಪಿಎಲ್‌ ಪಡಿತರ ಚೀಟಿ ಹೊಂದಿದ ಕುಟುಂಬದವರಿಗೆ ₹ 1 ಲಕ್ಷ ಪರಿಹಾರ ಧನ ನೀಡಲು ತೀರ್ಮಾನಿಸಲಾಗಿದೆ. ಇಂತಹ ಕಷ್ಟ ಕಾಲದಲ್ಲಿ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಅವರದು ದಿಟ್ಟ ನಿರ್ಧಾರ ಎಂದು ಅವರು ಸ್ವಾಗತಿಸಿದರು.

ಸಾವಿನ ಪ್ರಮಾಣ ಏರಿಕೆಯಾಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಈಗ ‘ಚೆಸ್ಟ್‌ ಎಕ್ಸರೆ’ ಮೂಲಕ ಪತ್ತೆಯಾದ ಕೊರೊನಾ ಸೋಂಕಿತರ ಸಾವನ್ನು ಕೋವಿಡ್‌ ಸಾವಿನಲ್ಲಿ ಸೇರಿಸಲಾಗುತ್ತಿದೆ. ಇದರಿಂದ ಸಾವಿನ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಅನ್ನಿಸುತ್ತಿದೆ’ ಎಂದು ಹೇಳಿದರು.

ಜೂನ್ 16, 17ರಂದು ಕೆ.ಆರ್.ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಪೂರ್ಣ ಕೋವಿಡ್‌ ಪರೀಕ್ಷೆ ನಡೆಯುವ ಕಾರ್ಯಕ್ರಮ ಒಂದು ಪೈಲಟ್ ಯೋಜನೆ. ಇದು ಯಶಸ್ವಿಯಾದರೆ ಎಲ್ಲ ಕ್ಷೇತ್ರಗಳಿಗೂ ಇದನ್ನು ವಿಸ್ತರಿಸಲಾಗುವುದು ಎಂದು ಅವರು ತಿಳಿಸಿದರು.

ಕೃಷಿ ಸಚಿವ ಬಿ.ಸಿ.ಪಾಟೀಲ, ಶಾಸಕ ಎಲ್.ನಾಗೇಂದ್ರ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಮಹದೇವಸ್ವಾಮಿ, ಅರಣ್ಯ ವಸತಿ ಹಾಗೂ ವಿಹಾರಧಾಮಗಳ ಅಧ್ಯಕ್ಷ ಅಪ್ಪಣ್ಣ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತಕುಮಾರ್ ಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT