ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಬಾವಲಿ ಚೆಕ್ ಪೋಸ್ಟ್ ನ್ನು ಸುರಿಯುತ್ತಿದ್ದ ಮಳೆಯ ನಡುವೆ ಸಚಿವ ಎಸ್.ಟಿ.ಸೋಮಶೇಖರ್ ಶನಿವಾರ ಪರಿಶೀಲನೆ ನಡೆಸಿದರು.
ಕೇರಳದಿಂದ ಬರುವವರು 72 ಗಂಟೆಗಳಿಗೆ ಮೀರದ ಕೋವಿಡ್ ಆರ್ ಟಿ ಪಿ ಸಿ ಆರ್ ಪರೀಕ್ಷೆ ನೆಗೆಟೀವ್ ವರದಿ ಕಡ್ಡಾಯವಾಗಿ ಹೊಂದಿರಬೇಕು. ಈ ವರದಿ ಇಲ್ಲದವರನ್ನು ನಿರ್ದಾಕ್ಷಿಣ್ಯವಾಗಿ ವಾಪಸ್ ಕಳುಹಿಸಬೇಕು ಎಂದು ಇಲ್ಲಿನ ಸಿಬ್ಬಂದಿಗೆ ಅವರು ಸೂಚಿಸಿದರು.
ಇಲ್ಲಿ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ, ಪೊಲೀಸ್ ಹಾಗೂ ಅರಣ್ಯ ಇಲಾಖೆ ತಂಡಗಳು ವಾಹನಗಳನ್ನು ತಡೆದು ಪರಿಶೀಲನೆ ನಡೆಸುತ್ತಿವೆ. ಸದ್ಯ ಕೇರಳದಿಂದ ಬರುವ ಎಲ್ಲರೂ ಆರ್ ಟಿ ಪಿ ಸಿ ಆರ್ ನೆಗೆಟೀವ್ ವರದಿಯೊಂದಿಗೆ ಬರುತ್ತಿದ್ದಾರೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್ ತಿಳಿಸಿದರು.
ವಾರಾಂತ್ಯ ಲಾಕ್ ಡೌನ್ ಇರುವುದರಿಂದ ಸರಕು ಸಾಗಣೆ ವಾಹನಗಳಿಗೆ ಆರ್ ಟಿ ಪಿ ಸಿ ಆರ್ ನೆಗೆಟೀವ್ ವರದಿ ಇದ್ದರೆ ಮಾತ್ರ ಪ್ರವೇಶ ನೀಡಲಾಗುತ್ತಿದ್ದು, ಪ್ರಯಾಣಿಕರ ವಾಹನಗಳನ್ನು ವಾಪಸ್ ಕಳುಹಿಸಲಾಗುತ್ತಿದೆ ಎಂದು ಸಿಬ್ಬಂದಿ ಮಾಹಿತಿ ನೀಡಿದರು.