ಮೈಸೂರು: ‘ಎಲ್ಲರೂ ತಮ್ಮ ಸುತ್ತಲಿನ ಪರಿಸರವನ್ನು ಪ್ರೀತಿಸುವ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಕಿವಿಮಾತು ಹೇಳಿದರು.
ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ನಗರದ ದೊಡ್ಡಕೆರೆ ಮೈದಾನದಲ್ಲಿ ಶುಕ್ರವಾರ ನಸುಕಿನಲ್ಲೇ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ‘ನಗರದ 65 ವಾರ್ಡ್ಗಳಲ್ಲಿ ಇಂದಿನಿಂದ ಐದು ದಿನ ಸಮರೋಪಾದಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುವುದು. ಇದರೊಂದಿಗೆ ನಾಗರಿಕರಲ್ಲಿ ಸ್ವಚ್ಛತೆಯ ಬಗ್ಗೆ ಅರಿವನ್ನೂ ಮೂಡಿಸುವ ಗುರಿ ಹೊಂದಲಾಗಿದೆ’ ಎಂದರು.
‘ಈ ಸ್ವಚ್ಛತಾ ಅಭಿಯಾನದಲ್ಲಿ ಮೈಸೂರು ಮಹಾನಗರ ಪಾಲಿಕೆ, ಮುಡಾ, ನೀರು ಸರಬರಾಜು ಮಂಡಳಿ, ಕೊಳಚೆ ನಿರ್ಮೂಲನಾ ಮಂಡಳಿ, ಗೃಹ ನಿರ್ಮಾಣ ಮಂಡಳಿ ಭಾಗಿಯಾಗಲಿದ್ದು, ಗುತ್ತಿಗೆದಾರರು ಕೈಜೋಡಿಸಿರುವುದು ಶ್ಲಾಘನೀಯ’ ಎಂದರು.
ಶಾಸಕ ಎಲ್.ನಾಗೇಂದ್ರ, ಮೇಯರ್ ಪುಷ್ಪಲತಾ ಜಗನ್ನಾಥ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗ್ಡೆ, ಸದಸ್ಯರಾದ ಸಂದೇಶ್ ಸ್ವಾಮಿ, ಮಾ.ವಿ.ರಾಮಪ್ರಸಾದ್, ಮಂಜುನಾಥ್ ಉಪಸ್ಠಿತರಿದ್ದರು.