ಮೈಸೂರು: ‘ಮೈಸೂರು ನಗರವು ಮತ್ತೊಮ್ಮೆ ಸ್ವಚ್ಛ ನಗರಿ ಎಂಬ ಹೆಸರು ಪಡೆದುಕೊಳ್ಳುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಸಿಬ್ಬಂದಿಗಳು ವರ್ಷದ ಎಲ್ಲಾ ದಿನಗಳಲ್ಲೂ ಪ್ರತಿಯೊಂದು ವಾರ್ಡ್ಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಮಾಡಬೇಕು. ನಗರವನ್ನು ಸ್ವಚ್ಛವಾಗಿಡಲು ಸಾರ್ವಜನಿಕರು ಸಹ ಕೈಜೋಡಿಸಬೇಕು’ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಮನವಿ ಮಾಡಿದರು.
ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ ‘ಬುಧವಾರ ಸ್ವಚ್ಛತಾ ದಿವಸ-2020’ ಕಾರ್ಯಕ್ರಮಕ್ಕೆ ಮಂಗಳವಾರ ಕಸ ತೆಗೆದು ಸ್ವಚ್ಛತೆ ಮಾಡುವ ಮೂಲಕ ಜಿಲ್ಲಾಧಿಕಾರಿ ಚಾಲನೆ ನೀಡಿದರು.
‘ಪ್ರತಿಯೊಂದು ವಾರ್ಡ್ಗಳಲ್ಲಿ ಒಂದು ವರ್ಷ ಪೂರ್ತಿ, ಪ್ರತಿ ಬುಧವಾರ ಸ್ವಚ್ಛತಾ ಕಾರ್ಯ ನಡೆಸುವ ಉದ್ದೇಶ ಹೊಂದಿದ್ದು, ಮುಂದಿನ ವರ್ಷದಲ್ಲಿ ಮೈಸೂರು ನಗರವನ್ನು ಸ್ವಚ್ಛ ನಗರಿ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಏರಿಸುವುದು ಹಾಗೂ ಸ್ವಚ್ಛತೆಯಿಂದ ಎಲ್ಲರ ಆರೋಗ್ಯ ಕಾಪಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ’ ಎಂದು ಅವರು ತಿಳಿಸಿದರು.
ಮಹಾನಗರ ಪಾಲಿಕೆ ಆಯುಕ್ತರಾದ ಶಿಲ್ಪಾನಾಗ್ ಮಾತನಾಡಿ ‘ನಗರವನ್ನು ಕಸಮುಕ್ತವನ್ನಾಗಿಸಲು ಈಗಿನಿಂದಲೇ ಪ್ರತಿಯೊಂದು ವಾರ್ಡ್ಗಳಲ್ಲಿ ‘ಬುಧವಾರ ಸ್ವಚ್ಛತಾ ದಿವಸ-2020’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಪಾಲಿಕೆ ಜತೆಯಲ್ಲಿ ನಗರದ ನಾಗರಿಕರು ಸಹ ಸಹಕರಿಸಿ, ಮೈಸೂರನ್ನು ಸ್ವಚ್ಛ ನಗರಿ ಮಾಡೋಣ’ ಎಂದು ಹೇಳಿದರು.
ಮಹಾನಗರ ಪಾಲಿಕೆ ಮೇಯರ್ ಪುಷ್ಪಲತಾ ಜಗನ್ನಾಥ್, ಉಪ ಮೇಯರ್ ಶಫೀ ಅಹಮದ್, ಹೆಚ್ಚುವರಿ ಜಿಲ್ಲಾಧಿಕಾರಿ ಪೂರ್ಣಿಮಾ, ಪಾಲಿಕೆಯ ಹೆಚ್ಚುವರಿ ಆಯುಕ್ತ ಶಿವಾನಂದಮೂರ್ತಿ ಹಾಗೂ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.