ಮೈಸೂರು: ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಈಚೆಗೆ ಉರಿಯುತ್ತಿರುವ ಸ್ಥಿತಿಯಲ್ಲಿ ದೊರೆತ ಯುವತಿ ಶವದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹದ ಗುರುತು ಪತ್ತೆ ಹಚ್ಚಲು 3 ಪ್ರತ್ಯೇಕ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.
ಐಪಿಎಸ್ ಪ್ರೊಬೇಷನರಿ ಅಧಿಕಾರಿ ಜಿತೇಂದ್ರ ಅವರಿಗೆ ಪ್ರಕರಣದ ತನಿಖೆಯ ಹೊಣೆ ವಹಿಸಲಾಗಿದೆ. ಯುವತಿಯ ಗುರುತು ಪತ್ತೆಗೆ ರಾಜ್ಯದ ಇತರೆ ಜಿಲ್ಲೆಗಳ ಪೊಲೀಸ್ ಠಾಣೆಗಳಿಗೂ ಮಾಹಿತಿ ನೀಡಲಾಗಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಕಾಣೆಯಾಗಿದ್ದ ಯುವತಿಯೊಬ್ಬರ ಪೋಷಕರು ಬಂದು ಮೃತದೇಹವನ್ನು ನೋಡಿದರಾದರೂ, ಅವರು ಗುರುತು ಪತ್ತೆ ಹಚ್ಚಲಿಲ್ಲ. ಮೃತದೇಹದ ಮರಣೋತ್ತರ ಪರೀಕ್ಷಾ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ನಂತರವಷ್ಟೇ ಸ್ಪಷ್ಟವಾದ ತೀರ್ಮಾನಕ್ಕೆ ಬರಲು ಸಾಧ್ಯ ಎಂದು ಮೂಲಗಳು ತಿಳಿಸಿವೆ.