ಮೈಸೂರು: ಇಲ್ಲಿನ ತಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಯುಗಾದಿ ಪ್ರಯುಕ್ತ ಶನಿವಾರ ಸಾವಿರಾರು ಭಕ್ತರು ಪುಣ್ಯಸ್ನಾನ ಮಾಡಿದರು.
ಸುತ್ತಮುತ್ತಲಿನ ಗ್ರಾಮದ ಜನರು ಕಪ್ಪಡಿ ಜಾತ್ರೆ ,ಬೋಪ್ಪೆಗೌಡನಪುರ ಮಠಕ್ಕೆ ಭೇಟಿ ನೀಡಿ ನಂತರ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಮನೆಗೆ ಭಕ್ತರು ತೆರಳಿದರು.
ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣ ಪುಣ್ಯಸ್ನಾನ ನಡೆದಿರಲಿಲ್ಲ. ಎರಡು ವರ್ಷಗಳ ಬಳಿಕ ತ್ರಿವೇಣಿ ಸಂಗಮದಲ್ಲಿ ಸಾವಿರಾರು ಭಕ್ತರು ಪುಣ್ಯಸ್ನಾನದಲ್ಲಿ ಭಾಗಿಯಾದರು.
ಮೈಸೂರು, ಚಾಮರಾಜನಗರ, ಮಂಡ್ಯ ಭಾಗದಿಂದ ಅಧಿಕ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು. ತಾಲ್ಲೂಕು ಆಡಳಿತವು ತಾತ್ಕಾಲಿಕ ಸ್ನಾನದ ಕೊಠಡಿ ಹಾಗೂ ಶೌಚಾಲಯಗಳನ್ನು ನಿರ್ಮಿಸಿತ್ತು. ಹೆಚ್ಚಿನ ಪೊಲೀಸ್ ಭದ್ರತೆಯನ್ನೂ ಕಲ್ಪಿಸಲಾಗಿತ್ತು.