ಎಚ್.ಡಿ.ಕೋಟೆ: ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟ ಹಾಗೂ ಹಾಡಿ ಅರಣ್ಯ ಸಮಿತಿಗಳ ಒಕ್ಕೂಟ ಎಚ್.ಡಿ.ಕೋಟೆ, ಪಿರಿಯಾಪಟ್ಟಣ, ಹುಣಸೂರು ತಾಲ್ಲೂಕುಗಳ ಜಂಟಿ ಆಶ್ರಯದಲ್ಲಿ ನಡೆಯುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹವು ಮೂರನೇ ದಿನಕ್ಕೆ ಮುಂದುವರಿದೆ.
ಪಟ್ಟಣದ ಮಿನಿ ವಿಧಾನಸೌಧ ಮುಂಭಾಗ ಮೂರು ತಾಲ್ಲೂಕಿನ ಆದಿವಾಸಿಗಳು ಅರಣ್ಯ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೆ ತರಲು ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ. ನಮ್ಮ ಬೇಡಿಕೆಗಳನ್ನು ಬಗೆಹರಿಸುವವರೆಗೂ ಇಲ್ಲಿಂದ ತೆರಳುವುದಿಲ್ಲ ಎಂದು ಆಗ್ರಹಿಸಿದ್ದಾರೆ.
ಈ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಸಿ.ಅನಿಲ್ ಕುಮಾರ್, ‘ನಿಮ್ಮ ಬೇಡಿಕೆಗಳ ಬಗ್ಗೆ ಈಗಾಗಲೇ ದೂರವಾಣಿ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ’. ಅವರು ‘ಜಿಲ್ಲಾಧಿಕಾರಿ ಕಚೇರಿಯಲ್ಲಿ ಅರಣ್ಯ ಹಕ್ಕು ಕಾಯ್ದೆ ಕುರಿತು ಗುರುವಾರ ಸಭೆ ನಡೆಯಲಿದೆ ಅಲ್ಲಿ ಚರ್ಚಿಸೋಣ’ ಎಂದು ತಿಳಿಸಿದ್ದಾರೆ. ಆದ್ದರಿಂದ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು.
ಶಾಸಕರ ಮನವಿಗೆ ಒಪ್ಪದ ಪ್ರತಿಭಟನಾಕಾರರು ನಾಳೆಯಿಂದ ಸರ್ವೆ ಕಾರ್ಯ ಪ್ರಾರಂಭಿಸಿದರೆ ಮಾತ್ರವೇ ಪ್ರತಿಭಟನೆ ಕೈಬಿಡುತ್ತೇವೆ. ಇಲ್ಲವಾದಲ್ಲಿ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಸುತ್ತೇವೆ ಎಂದು ಉತ್ತರಿಸಿದರು.