ಮೈಸೂರು: ಇಲ್ಲಿನ ಜಿಲ್ಲಾಸ್ಪತ್ರೆ ಆವರಣದಲ್ಲಿ ₹ 1 ಕೋಟಿ ಮೌಲ್ಯದ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣ ಸಂಬಂಧ ಸಂಸದ ಪ್ರತಾಪಸಿಂಹ ಸೋಮವಾರ ಸ್ಥಳ ಪರಿಶೀಲನೆ ನಡೆಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರದ ವತಿಯಿಂದ ದೇಶದಲ್ಲಿ 1,200 ಕಡೆ ಆಮ್ಲಜನಕ ಉತ್ಪಾದನಾ ಘಟಕಗಳು ಸ್ಥಾಪನೆಯಾಗುತ್ತಿವೆ. ಇಲ್ಲೂ ಸಹ ಜುಲೈ್ 20ರ ಒಳಗೆ ಒಂದು ನಿಮಿಷಕ್ಕೆ ಒಂದು ಸಾವಿರ ಲೀಟರ್ನಷ್ಟು ಆಮ್ಲಜನಕ ಉತ್ಪಾದಿಸಬಲ್ಲ ಘಟಕ ಬರಲಿದೆ’ ಎಂದು ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಈಗಾಗಲೇ ಕೆ.ಆರ್.ಆಸ್ಪತ್ರೆ ಆವರಣದಲ್ಲಿ ಮತ್ತೊಂದು ಘಟಕ ನಿರ್ಮಾಣ ಕುರಿತ ಸಿವಿಲ್ ಕಾಮಗಾರಿಗಳು ಮುಗಿದಿವೆ. ಈ ತಿಂಗಳಾಂತ್ಯಕ್ಕೆ ಯಂತ್ರೋಪಕರಣಗಳನ್ನು ಅಳವಡಿಸಲಾಗುತ್ತದೆ. ನಂತರ ಅಲ್ಲಿ ಆಮ್ಲಜನಕ ಉತ್ಪಾದನೆಯಾಗಲಿದೆ ಎಂದರು.
ಜೂನ್ 22ರಂದು ಇದೇ ರೀತಿಯ ಘಟಕದ ಸ್ಥಾಪನೆ ಸಂಬಂಧ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಸ್ಥಳ ಪರಿಶೀಲನೆ ನಡೆಸಲಾಗುವುದು. ಕೋವಿಡ್ ಎದುರಿಸಲು ಎಲ್ಲ ಬಗೆಯ ಸಿದ್ಧತೆಯಲ್ಲಿ ತೊಡಗಿಕೊಳ್ಳಲಾಗಿದೆ ಎಂದು ಹೇಳಿದರು.
ಕೋವಿಡ್ 3ನೇ ಅಲೆ ಎದುರಿಸಲು ಈಗಾಗಲೇ ಸಾಕಷ್ಟು ಸಭೆಗಳನ್ನು ನಡೆಸಲಾಗಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 200ರಿಂದ 300 ಬೆಡ್ಗಳಿಗೆ ವ್ಯವಸ್ಥೆ ಮಾಡಲಾಗಿದೆ. ಸಂದರ್ಭದ ಬಂದರೆ ಇಲ್ಲಿ ಖಾಸಗಿ ವೈದ್ಯರ ಸೇವೆ ಪಡೆಯುವ ಉದ್ದೇಶ ಇದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪ್ರಸಾದ್, ಜಿಲ್ಲಾ ಸರ್ಜನ್ ಡಾ.ರಾಜೇಶ್ವರಿ, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಡಾ.ನಂಜರಾಜ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ದೇಶಕ ಶ್ರೀಧರ್ ಇದ್ದರು.