ಮೈಸೂರು: ‘ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದವರನ್ನು ಸ್ಮರಿಸಬೇಕು’ ಎಂದು ಕಾಲೇಜು ಶಿಕ್ಷಣ ಇಲಾಖೆಯ ಮೈಸೂರು ಪ್ರಾದೇಶಿಕ ಜಂಟಿ ನಿರ್ದೇಶಕ ಕಚೇರಿಯ ವಿಶೇಷಾಧಿಕಾರಿ ಡಾ.ಬಿ.ಕೆ.ಕೆಂಪೇಗೌಡ ಹೇಳಿದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ನಗರದ ಜಯಲಕ್ಷ್ಮೀಪುರಂನ ಎಸ್ಬಿಆರ್ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ (ಸ್ವಾಯತ್ತ) ಗ್ರಂಥಾಲಯ ಅಧ್ಯಯನ ವಿಭಾಗದಲ್ಲಿ ಕಾಲೇಜಿನ ಇತಿಹಾಸ ಮತ್ತು ಗ್ರಂಥಾಲಯ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ವಾತಂತ್ರ್ಯ ಹೋರಾಟಗಾರರ ಭಿತ್ತಿಚಿತ್ರಗಳು ಹಾಗೂ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಸ್ವಾತಂತ್ರ್ಯ ಸೇನಾನಿಗಳನ್ನು ಸ್ಮರಿಸುವ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕು’ ಎಂದು ಆಶಿಸಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ.ಬಿ.ಆರ್. ಜಯಕುಮಾರಿ ಮಾತನಾಡಿ, ‘ಇಂತಹ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ– ವಿಶ್ವಾಸ ವೃದ್ಧಿಸುತ್ತದೆ. ಕ್ರಿಯಾಶೀಲ ಬೆಳವಣಿಗೆಯೂ ಆಗುತ್ತದೆ’ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಸಿದ್ಧಪಡಿಸಿದ, ಸ್ವಾತಂತ್ರ್ಯ ಹೋರಾಟಗಾರರು ಮತ್ತು ಚಳವಳಿಗಳನ್ನು ಬಿಂಬಿಸುವ ಭಿತ್ತಿಚಿತ್ರಗಳನ್ನು ಪ್ರದರ್ಶಿಸಲಾಯಿತು. ಫೋಟೊಗಳು, ಸ್ವಾತಂತ್ರ್ಯ ಸಂಗ್ರಾಮದ ಕೃತಿಗಳು, ಅಪರೂಪದ ನಾಣ್ಯಗಳು ಇದ್ದವು.
ಮಹಾಜನ ವಿದ್ಯಾಸಂಸ್ಥೆಯ ಅಧ್ಯಕ್ಷ ಮುರಳೀಧರ ಭಾಗವತ್, ಗೌರವ ಕಾರ್ಯದರ್ಶಿ ಡಾ.ಟಿ.ವಿಜಯಲಕ್ಷ್ಮಿ ಮುರಳೀಧರ್, ಗ್ರಂಥಪಾಲಕಿ ವೀಣಾ, ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಚ್.ಆರ್.ತಿಮ್ಮೇಗೌಡ, ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ನಂದೀಶ್ ಎ.ಆರ್. ಪಾಲ್ಗೊಂಡಿದ್ದರು.
ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಶ್ರೀಧರ ಎಚ್. ಸ್ವಾಗತಿಸಿದರು.