ಮೈಸೂರು: ‘ರಾಜ್ಯದಲ್ಲಿ ಯಾವುದೇ ನಗರದಲ್ಲಿ ಒತ್ತುವರಿಯಾಗಿದ್ದರೂ ಅದನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ನಿರ್ದಾಕ್ಷಿಣ್ಯವಾಗಿ ನಡೆಸಲಾಗುವುದು’ ಎಂದುನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ತಿಳಿಸಿದರು.
ಇಲ್ಲಿ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ‘ಬೆಂಗಳೂರು ನಗರದ ಜೊತೆಗೆ ರಾಜ್ಯದ ಉದ್ದಗಲಕ್ಕೂ ಒತ್ತುವರಿ ತೆರವು ಮಾಡಲಾಗುವುದು. ಕೆರೆ–ರಾಜಕಾಲವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಪರಿಣಾಮ, ಮಳೆ ಬಂದಾಗ ತೀವ್ರ ಸಮಸ್ಯೆ ಆಗುತ್ತಿದೆ. ಇದನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.
‘ಇತ್ತೀಚೆಗೆ 11ಸಾವಿರಕ್ಕೂ ಹೆಚ್ಚು ಪೌರಕಾರ್ಮಿಕರನ್ನು ಕಾಯಂಗೊಳಿಸಲಾಗಿದೆ. ಉಳಿದವರನ್ನೂ ಹಂತ– ಹಂತವಾಗಿ ಕಾಯಂ ಮಾಡಲಾಗುವುದು. ಅವರ ಬಹು ವರ್ಷಗಳ ಬೇಡಿಕೆಗಳನ್ನು ಈಡೇರಿಸಲಾಗುವುದು’ ಎಂದು ಪ್ರತಿಕ್ರಿಯಿಸಿದರು.