ಮೈಸೂರು: ನಂಜನಗೂಡಿನಲ್ಲಿ ಈಚೆಗೆ ಮಹರ್ಷಿ ವಾಲ್ಮೀಕಿ ಜಯಂತಿ ಮೆರವಣಿಗೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಅಮಾಯಕ ಯುವಕರ ಮೇಲೆ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆಯ ನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ಪ್ರತಿಭಟನಾಕಾರರು ಪೊಲೀಸರು ಮತ್ತು ನಂಜನಗೂಡು ತಾಲ್ಲೂಕು ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಮೆರವಣಿಗೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಪೊಲೀಸರು ಲಾಠಿಪ್ರಹಾರ ನಡೆಸಿದ್ದು ಮೊದಲ ತಪ್ಪು. ಇಷ್ಟು ಸಾಲದು ಎಂಬಂತೆ ಇವರು ಅಮಾಯಕ ಯುವಕರನ್ನು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಕಿಡಿಕಾರಿದರು.ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಕುಮ್ಮಕ್ಕಿನಿಂದ ಪೊಲೀಸರು ಈ ಕ್ರಮ ಜರುಗಿಸಿದ್ದಾರೆ. ಮೆರವಣಿಗೆಗೆ ಸೂಕ್ತವಾದ ಪೊಲೀಸ್ ಭದ್ರತೆ ಒದಗಿಸದೇ ಇರುವುದೇ ಘಟನೆಗೆ ಪ್ರಮುಖ ಕಾರಣವಾಗಿದೆ. ಪೊಲೀಸರೇ ಯುವಕರನ್ನು ಪ್ರಚೋದಿಸಿ ಗಲಾಟೆಯಾಗುವಂತೆ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.
ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ದೇವರಾಜ್ ಟಿ.ಕಾಟೂರ್, ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ದ್ಯಾವಪ್ಪನಾಯಕ, ಮುಖಂಡರಾದ ಎಸ್.ಸಿ.ಬಸವರಾಜು, ಚೆನ್ನನಾಯಕ, ಪ್ರಭಾಕರ್ ಹುಣಸೂರು ಪ್ರತಿಭಟನೆಯಲ್ಲಿದ್ದರು.