ಮೈಸೂರು: ‘ಆಶಾ ಸಂರಕ್ಷಣಾ ದಿನ’ದ ಅಂಗವಾಗಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ರಕ್ಷಣೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ದಿನದಿಂದ ದಿನಕ್ಕೆ ಆಶಾ ಕಾರ್ಯಕರ್ತೆಯರ ಮೇಲೆ ಪುಂಡರು ಮತ್ತು ಪಾನಮತ್ತರ ದಾಳಿಗಳು ಹೆಚ್ಚುತ್ತಿವೆ. ಸಮಾಜದ ಒಳಿತಿಗಾಗಿ ಕೆಲಸ ಮಾಡುವ ಕಾರ್ಯಕರ್ತೆಯರಿಗೆ ರಕ್ಷಣೆ ಒದಗಿಸಬೇಕಿದೆ ಎಂದು ಅವರು ಒತ್ತಾಯಿಸಿದರು.
ಆಶಾ ಕಾರ್ಯಕರ್ತೆಯರು ಜೀವ ಭಯದಲ್ಲಿ ಕೆಲಸ ಮಾಡುವಂತಾಗಿದೆ. ಹಲ್ಲೆಕೋರರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ಆಗ್ರಹಿಸಿದರು.
ಮಾರ್ಚ್ ತಿಂಗಳಿನಿಂದ ಕೋವಿಡ್–19 ಕಾರ್ಯ ನಿಯೋಜನೆ ಮುಗಿಯುವವರೆಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. ₹ 10 ಸಾವಿರ ಮಾಸಿಕ ಸಂಭಾವನೆ ನೀಡಬೇಕು ಎಂದು ಮನವಿ ಮಾಡಿದರು.
ಅಗತ್ಯ ಇರುವಷ್ಟು ಮಾಸ್ಕ್, ಸ್ಯಾನಿಟೈಸರ್ ಹಾಗೂ ಗ್ಲೌಸ್ಗಳನ್ನು ನೀಡಬೇಕು. ಮದ್ಯ ನಿಷೇಧ ಮಾಡಬೇಕು. ಕೋವಿಡ್ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ಗೆ ಕಲ್ಪಿಸಿರುವ ₹ 50 ಲಕ್ಷ ವಿಮಾ ಸೌಲಭ್ಯವನ್ನು ಆಶಾ ಕಾರ್ಯಕರ್ತೆಯರಿಗೂ ವಿಸ್ತರಿಸಬೇಕು ಎಂದು ಅವರು ಆಗ್ರಹಿಸಿದರು.
ಈ ಕುರಿತ ಬೇಡಿಕೆಗಳಿರುವ ಪತ್ರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಜಿಲ್ಲಾಧಿಕಾರಿ ಮೂಲಕ ಕಾರ್ಯಕರ್ತೆಯರು ಸಲ್ಲಿಸಿದರು.