ಮೈಸೂರು: ಜಿಲ್ಲಾಡಳಿತ, ಜಿಲ್ಲಾ ಸ್ವಿಪ್ ಸಮಿತಿ ಹಾಗೂ ಮಹಾನಗರ ಪಾಲಿಕೆಯಿಂದ ಮತದಾನ ಜಾಗೃತಿಗಾಗಿ ನಗರದಲ್ಲಿ ಸೋಮವಾರ ಮೋಂಬತ್ತಿ ಮೆರವಣಿಗೆ ನಡೆಸಲಾಯಿತು.
ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆದ ಮೆರವಣಗೆಗೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ‘ಮತದಾನ ಮಾಡುವುದು ಅರ್ಹರಾದವರೆಲ್ಲರ ಕರ್ತವ್ಯವಾಗಿದೆ. ಪ್ರತಿ ಮತವೂ ದೇಶದ ಬೆಳೆವಣಿಗೆಗೆ ಉಪಯುಕ್ತವಾಗಿರುತ್ತದೆ ಎನ್ನುವುದನ್ನು ಮರೆಯಬಾರದು’ ಎಂದರು.
‘ಯಾರೂ ಹಣದ ಆಮಿಷಕ್ಕೆ ಸಿಲುಕಿ ಮತಗಳನ್ನು ನೀಡಬಾರದು. ಇತರರಲ್ಲೂ ಅರಿವು ಮೂಡಿಸಿ ಉತ್ತಮ ಮತದಾನ ಪ್ರಕ್ರಿಯೆಗೆ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು’ ಎಂದು ಕೋರಿದರು.
ವಿವಿಧ ಇಲಾಖೆಗಳ ಸಿಬ್ಬಂದಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಿ. ಬಾನೋತ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಕೆ.ಎಂ.ಗಾಯತ್ರಿ, ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ್ ರೆಡ್ಡಿ ಇದ್ದರು.