ಮೈಸೂರು: ‘ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿಯನ್ನು ಕೇಂದ್ರಕ್ಕೆ ಮನವರಿಕೆ ಮಾಡಿಕೊಡಲು ವಿಫಲರಾಗಿರುವ ಈ ಭಾಗದ ಸಂಸದರಾದ ಪ್ರತಾಪ ಸಿಂಹ, ಸುಮಲತಾ ಅಂಬರೀಶ್ ಹಾಗೂ ವಿ. ಶ್ರೀನಿವಾಸ ಪ್ರಸಾದ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಎಸ್.ರಾಜೇಶ್ ಆಗ್ರಹಿಸಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಸದರು ಕೇಂದ್ರ ಸರ್ಕಾರಕ್ಕೆ ಮಳೆ ಕೊರತೆ ಬಗ್ಗೆ ಮನವರಿಕೆ ಮಾಡಿಕೊಡುವಲ್ಲಿ ವಿಫಲರಾಗಿದ್ದಾರೆ. ಕೃಷಿಗಷ್ಟೇ ಅಲ್ಲ, ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ. ಆದರೂ ತಮಿಳುನಾಡಿಗೆ ನೀರು ಹರಿಸಬೇಕಾದ ಸ್ಥಿತಿ ಒದಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.
‘ಇಂಡಿಯಾ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಜೊತೆಗೆ ಡಿಎಂಕೆ ಪಕ್ಷಗಳೂ ಕೈಜೋಡಿಸಿರುವುದರಿಂದ, ಕಾವೇರಿ ನೀರಿನ ವಿಷಯದಲ್ಲಿ ಎರಡೂ ಪಕ್ಷಗಳ ನಡುವೆ ಒಡಕು ಮೂಡಿಸಲು ಮತ್ತು ಈ ಭಾಗದ ರೈತರ ಹಿತ ಬಲಿ ಕೊಡಲು ಬಿಜೆಪಿ ಹುನ್ನಾರ ನಡೆಸಿದೆ. ಕೇಂದ್ರ ಸರ್ಕಾರದ ಪ್ರೇರಣೆಯಿಂದಲೇ ನೀರು ಹರಿಸಬೇಕಾಗಿ ಬಂದಿದೆ. ಎರಡೂ ರಾಜ್ಯಗಳ ನಡುವೆ ಅಶಾಂತಿ ವಾತಾವರಣ ಸೃಷ್ಟಿಸಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಮುಂದಾಗಿದೆ’ ಎಂದು ಆರೋಪಿಸಿದರು.