ನಂಜನಗೂಡು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವ ಕ್ರಮ ಖಂಡಿಸಿ ತಾಲ್ಲೂಕು ಬಿಜೆಪಿ ಕಾರ್ಯಕರ್ತರು ನಗರದ ಹುಲ್ಲಹಳ್ಳಿ ವೃತ್ತದಲ್ಲಿ ಶುಕ್ರವಾರ ಪ್ರತಿಭಟಿಸಿದರು.
ಬಿಜೆಪಿ ಮುಖಂಡ ಬಿ.ಹರ್ಷವರ್ಧನ್ ಮಾತನಾಡಿ, ‘ಕಾಂಗ್ರೆಸ್ ಸರ್ಕಾರವು ರೈತ ವಿರೋಧಿ ನೀತಿ ಅನುಸರಿಸಿ ರೈತರಿಗೆ ಮರಣ ಶಾಸನ ಬರೆಯುತ್ತಿದೆ. ಮಳೆ ಕೊರತೆಯಿಂದಾಗಿ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ ಕುಸಿದಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಲಿದೆ. ಆದರೂ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವುದು ರೈತರಿಗೆ ಮಾಡಿದ ದ್ರೋಹವಾಗಿದೆ. ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಿಸಾನ್ ಸಮ್ಮಾನ್ ಯೋಜನೆ, ರೈತ ಮಕ್ಕಳಿಗೆ ನೀಡುವ ವಿದ್ಯಾನಿಧಿ ಯೋಜನೆಯನ್ನು ರದ್ದುಗೊಳಿಸಿದೆ. ನೀರಾವರಿ ಯೋಜನೆ ಹಾಗೂ ಯಡಿಯಾಲ ಭಾಗದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಅನುದಾನವನ್ನು ತಡೆ ಹಿಡಿದಿದೆ’ ಎಂದು ದೂರಿದರು.
‘ಸರ್ಕಾರ ಬಿಟ್ಟಿ ಯೋಜನೆಗಳ ಅನುಷ್ಠಾನಕ್ಕಾಗಿ ಎಸ್ಇಪಿ, ಟಿಎಸ್ಪಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದೆ. ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಎಸ್ಇಪಿ, ಟಿಎಸ್ಪಿ ಅನುದಾನವನ್ನು ₹2 ಸಾವಿರ ಕೋಟಿಗೆ ಕಡಿತಗೊಳಿಸಿದ್ದಕ್ಕಾಗಿ ದಸಂಸ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿದ್ದವು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ₹11 ಸಾವಿರ ಕೋಟಿ ದುರ್ಬಳಕೆ ಮಾಡಿಕೊಂಡಿದ್ದರೂ ಬಾಯಿ ಮುಚ್ಚಿ ಕುಳಿತಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ಮುಖಂಡರಾದ ಎಸ್. ಮಹದೇವಯ್ಯ, ಕುಂಬ್ರಹಳ್ಳಿ ಸುಬ್ಬಣ್ಣ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಹೊರಳವಾಡಿರಳವಾಡಿ ಮಹೇಶ್, ಶ್ರೀನಿವಾಸ್ ರೆಡ್ಡಿ, ಎಚ್.ಎಸ್. ಮಹದೇವಸ್ವಾಮಿ, ಎನ್.ಆರ್. ಕೃಷ್ಣಪ್ಪಗೌಡ, ಎಸ್.ಎಂ.ಕೆಂಪಣ್ಣ, ಕೆಂಡಗಣ್ಣಪ್ಪ, ಕಣೆನೂರು ಪರಶಿವಮೂರ್ತಿ, ಸಿದ್ದರಾಜು, ಹೆಮ್ಮರಗಾಲ ಶಿವಣ್ಣ, ಶಿರಮಳ್ಳಿ ಮಹಾದೇವಸ್ವಾಮಿ, ಮಧುರಾಜ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.