ಸಾಲಿಗ್ರಾಮ: ತಾಲ್ಲೂಕಿನ ಚುಂಚನಕಟ್ಟೆಯ ಕೋದಂಡರಾಮ ದೇವಾಲಯದಲ್ಲಿ ಇದೇ ಪ್ರಥಮ ಬಾರಿಗೆ ಕಡೇ ಶ್ರಾವಣ ಶನಿವಾರದಂದು ಕೋದಂಡರಾಮ ಚಿಕ್ಕಜಾತ್ರೆ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ದೇವಾಲಯದ ಅರ್ಚಕರಾದ ವಾಸುದೇವನ್ ಹಾಗೂ ನಾರಾಯಣ ಅಯ್ಯಂಗಾರ್ ನೇತೃತ್ವದಲ್ಲಿ ವಿಶೇಷ ಪೂಜೆಗಳು ನಡೆದವು. ಶನಿವಾರ ಮುಂಜಾನೆಯಿಂದಲೇ ಸಾವಿರಾರು ಭಕ್ತರು ಕೋದಂಡರಾಮನಿಗೆ ವಿಶೇಷ ಪೂಜೆ ಸಲ್ಲಿಸಿದರು. ನವ ದಂಪತಿಗಳು ಜಾತ್ರೆಯಲ್ಲಿ ಪಾಲ್ಗೊಂಡರು. ಕೋದಂಡರಾಮನಿಗೆ ಕ್ಷೀರಾಭಿಷೇಕ, ಕುಂಕುಮಾರ್ಚನೆ ಹಾಗೂ ಪಂಚಾಮೃತ ಅಭಿಷೇಕ, ಹೋಮ ನಡೆಯಿತು.
ಮಧ್ಯಾಹ್ನ 11.15 ಗಂಟೆಗೆ ಅರ್ಚಕರು ಕೋದಂಡರಾಮ, ಸೀತೆ ಹಾಗೂ ಲಕ್ಷ್ಮಣರ ಉತ್ಸವ ಮೂರ್ತಿಗಳನ್ನು ದೇವಾಲಯ ಪ್ರಾಂಗಣದಲ್ಲಿ ಹೂವಿನಿಂದ ಅಲಂಕೃತಗೊಂಡಿದ್ದ ರಥೋತ್ಸವದಲ್ಲಿ ಪ್ರತಿಷ್ಠಾಪಿಸುತ್ತಿದ್ದಂತೆ ಸಾವಿರಾರು ಭಕ್ತರು ಜಯಘೋಷ ಹಾಕಿ ರಥವನ್ನು ದೇವಾಲಯದ ಸುತ್ತ ಎಳೆದರು.
ಹುಣಸೂರು, ಪಿರಿಯಾಪಟ್ಟಣ, ಎಚ್.ಡಿ.ಕೋಟೆ, ತಿ.ನರಸೀಪುರ ಹಾಗೂ ಹಾಸನ ಜಿಲ್ಲೆಯ ಹೊಳೆನರಸೀಪುರ, ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಿಂದ ನೂರಾರು ಭಕ್ತರು ಜಾತ್ರೆಗೆ ಆಗಮಿಸಿದ್ದರು.
ಕೆಪಿಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ದೊಡ್ಡಸ್ವಾಮಿಗೌಡ, ವನಜಾಕ್ಷಮ್ಮ ಕೋದಂಡರಾಮನಿಗೆ ಪೂಜೆ ಸಲ್ಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.