ಮೈಸೂರು: ‘ಶಿಕ್ಷಕರು ಮಕ್ಕಳಿಗೆ ಪಠ್ಯದೊಂದಿಗೆ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ವಿಚಾರ ಕಲಿಸಬೇಕು. ಅವರಲ್ಲಿ ಸುಪ್ತವಾಗಿ ಹುದುಗಿರುವ ಪ್ರತಿಭೆಯ ವಿಕಾಸಕ್ಕೆ ಶ್ರಮಿಸಬೇಕು’ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಟಿ.ಸತೀಶ್ ಜವರೇಗೌಡ ಹೇಳಿದರು.
ತಾಲ್ಲೂಕಿನ ಮೆಲ್ಲಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಮಂಗಳವಾರ ನಡೆದ ‘ವಲಯ ಮಟ್ಟದ ಪ್ರತಿಭಾ ಕಾರಂಜಿ’ ಉದ್ಘಾಟಿಸಿ ಮಾತನಾಡಿದ ಅವರು, ‘ಮಕ್ಕಳಲ್ಲಿನ ಪ್ರತಿಭೆ ಅರಳಲು ಶಿಕ್ಷಕರು ಪೂರಕ ವಾತಾವರಣ ಕಲ್ಪಿಸಬೇಕು’ ಎಂದು ಹೇಳಿದರು.
‘ಶಾಲಾ ಕಾಲೇಜುಗಳಲ್ಲಿ ನಡೆಯುವ ಸಾಂಸ್ಕೃತಿಕ ಸ್ಪರ್ಧೆಗಳು ಕಲಿಕೆ ಚೈತನ್ಯ ಶೀಲತೆ ತುಂಬುತ್ತವೆ. ವಿದ್ಯಾರ್ಥಿಗಳು ತಮ್ಮಲ್ಲಿನ ವಿಶೇಷವಾದ ಪ್ರತಿಭೆ ಅಭಿವ್ಯಕ್ತಿಗೊಳಿಸಲು ಸೂಕ್ತ ವೇದಿಕೆ ಕಲ್ಪಿಸುತ್ತಿವೆ. ಇಂತಹ ಸದಾವಕಾಶ ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಸಾಧನೆ ಮಾಡಬೇಕು’ ಎಂದರು.
ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹೋಬಳಿ ಕಾರ್ಯದರ್ಶಿ ಕುಮಾರ್ ಮಾತನಾಡಿ, ‘ವಿದ್ಯಾರ್ಥಿಗಳು ಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಸೋಲು ಗೆಲುವಿನ ಬಗ್ಗೆ ಆಸಕ್ತಿ ವಹಿಸಬಾರದು. ಸ್ಪರ್ಧಾ ಮನೋಭಾವದಿಂದ ಪಾಲ್ಗೊಳ್ಳುವ ಮೂಲಕ ತಮ್ಮ ಪ್ರತಿಭೆ ಪ್ರದರ್ಶನ ಮಾಡಬೇಕು’ ಎಂದರು.
ಶಾಲಾಭಿವೃದ್ಧಿ ಮತ್ತು ಮೇಲು ಸ್ತುವಾರಿ ಸಮಿತಿ ಅಧ್ಯಕ್ಷ ಮಂಚಪ್ಪ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗರತ್ನ ಚಂದ್ರ ಕುಮಾರ್, ಸದಸ್ಯರಾದ ಶಂಕರ್, ನೀಲಾ, ಸಿಆರ್ಪಿ ದೀಪು, ನಿಕಟಪೂರ್ವ ಸಿಆರ್ಪಿ ಲೋಕೇಶ್ ಪೂರಿಗಾಲಿ, ಮುಖ್ಯ ಶಿಕ್ಷಕಿ ಪಿ.ಎನ್.ವೀಣಾ ಇದ್ದರು.