ಮೈಸೂರು: ಉತ್ತರ ಪ್ರದೇಶದ ಹಾಥರಸ್ನಲ್ಲಿ ಪರಿಶಿಷ್ಟ ಜಾತಿಯ ಯುವತಿಯ ಮೇಲೆ ನಡೆದ ಅತ್ಯಾ ಚಾರ ಘಟನೆ ಖಂಡಿಸಿ ನಗರದಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಗುರು ವಾರವೂ ಪ್ರತಿಭಟನೆಗಳು ನಡೆದವು.
ದಲಿತ ಸಂಘರ್ಷ ಸಮಿತಿ ಮೈಸೂರು ಶಾಖೆ ವತಿಯಿಂದ ಪುರಭವನದ ಮುಂಭಾಗ ಪ್ರತಿ ಭಟನೆ ಹಮ್ಮಿಕೊಳ್ಳಲಾಯಿತು. ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರಿಂದ ಅಲ್ಲಿನ ಸರ್ಕಾರವನ್ನು ಕೂಡಲೇ ವಜಾ ಗೊಳಿಸಬೇಕು ಎಂದು ಒತ್ತಾಯಿಸಿದರು.
ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ, ಅವರ ಕುಟುಂಬದ ಆಸ್ತಿಯನ್ನು ಮುಟ್ಟು ಗೋಲು ಹಾಕಬೇಕು. ಸಂತ್ರಸ್ತೆಯ ಕುಟುಂಬಕ್ಕೆ ₹ 5 ಕೋಟಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಈ ಹಿಂದೆ ನಡೆದ ನಿರ್ಭಯ ಪ್ರಕರಣ, ಪ್ರಿಯಾಂಕ ರೆಡ್ಡಿ ಪ್ರಕರಣಗಳಲ್ಲಿ ಸರ್ಕಾರ ತೋರಿದ್ದ ಉತ್ಸಾಹವನ್ನು ಈ ಪ್ರಕರಣದಲ್ಲಿ ಏಕೆ ತೋರುತ್ತಿಲ್ಲ ಎಂದು ಪ್ರಶ್ನಿಸಿದರು.
ಅತ್ಯಾಚಾರಿಗಳ ಕೃತ್ಯದಿಂದ ಗಂಭೀರ ಗಾಯಗೊಂಡಿದ್ದ ಯುವತಿ ಸೆ.29 ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ವಿಷಯವನ್ನು ತಂದೆ ಮತ್ತು ಸಹೋದರನಿಗೆ ತಿಳಿಸದೆ ಪೊಲೀಸರು ರಾತ್ರೋರಾತ್ರಿ ಮೃತದೇಹ ಕೊಂಡೊಯ್ದು ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಸುಟ್ಟುಹಾಕಿದ್ದಾರೆ. ಪ್ರಭಾವಿಗಳ ಒತ್ತಡಕ್ಕೆ ಮಣಿದು ಅತ್ಯಾಚಾರಿಗಳನ್ನು ರಕ್ಷಿಸುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು.
ಗಲ್ಲು ಶಿಕ್ಷೆಯಾಗಲಿ: ಅತ್ಯಾಚಾರಿಗಳನ್ನು ಪತ್ತೆಹಚ್ಚಿ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
‘ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕ್ರೂರವಾಗಿ ಹಿಂಸಿಸಲಾಗಿದೆ. ಉತ್ತರ ಪ್ರದೇಶ ಪೊಲೀಸರು ಇನ್ನೂ ಆರೋಪಿಗಳನ್ನು ಬಂಧಿಸಿಲ್ಲ. ಉತ್ತರ ಪ್ರದೇಶದಲ್ಲಿ ಶ್ರೀಮಂತರಿಗೊಂದು ನ್ಯಾಯ, ಬಡವರಿಗೊಂದು ನ್ಯಾಯ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಪ್ರತಿಭಟನಕಾರರು ಕಿಡಿಕಾರಿದರು.
ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ದ್ಯಾವಪ್ಪ ನಾಯಕ, ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಹುಣಸೂರು, ಪಡುವಾರಹಳ್ಳಿ ರಾಮಕೃಷ್ಣ, ಶ್ರೀಧರ್, ರಾಜು, ಪ್ರಕಾಶ್, ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಪಾಲ್ಗೊಂಡರು.