ಮೈಸೂರು: ‘ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಪುರಭವನ ಮುಂಭಾಗದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಶುಕ್ರವಾರ ಪ್ರತಿಭಟಿಸಿದರು.
‘ತಿ.ನರಸೀಪುರದಲ್ಲಿ ನಡೆದ ಯುವ ಬ್ರಿಗೇಡ್ ಸಂಚಾಲಕ ವೇಣುಗೋಪಾಲ್ ಅವರ ಹತ್ಯೆಯನ್ನು ವೈಭವೀಕರಿಸಿ, ರಾಜಕೀಯಕರಣಗೊಳಿಸಲು ಚಕ್ರವರ್ತಿ ಸೂಲಿಬೆಲೆ ಯತ್ನಿಸಿದ್ದಾರೆ. ಪ್ರಕರಣದಲ್ಲಿ ಸಚಿವ ಎಚ್.ಸಿ.ಮಹದೇವಪ್ಪ ಅವರ ಮಗನ ಹೆಸರನ್ನು ಎಳೆದು ತರಲು ಪ್ರಯತ್ನಿಸಿರುವುದನ್ನು ಖಂಡಿಸುತ್ತೇವೆ. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವ ಕೋಮುವಾದಿ ಸಂಘಟನೆಗಳ ವಿರುದ್ಧ ವಿಶೇಷ ಕಾನೂನು ಜಾರಿ ಮಾಡಬೇಕು’ ಎಂದು ಆಗ್ರಹಿಸಿದರು.
‘ಯುವ ಬ್ರಿಗೇಡ್ ಎಂಬ ಅನಧಿಕೃತ ಸಂಘಟನೆಯ ನೇತಾರರಾಗಿರುವ ಚಕ್ರವರ್ತಿ ಸೂಲಿಬೆಲೆ ಶೂದ್ರ, ಆದಿವಾಸಿ, ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ಯುವಕರಿಗೆ ಭಾವನಾತ್ಮಕ ವಿಚಾರಗಳ ಮೂಲಕ ಮೌಢ್ಯ ತುಂಬುತ್ತಿದ್ದಾರೆ. ಆರ್ಟಿಐ ಕಾರ್ಯಕರ್ತ ವಿನಯ್ ಬಾಳಿಗರನ್ನು ಕೊಂದ ನರೇಶ್ ಶೆಣೈ ಜೈಲಿನಿಂದ ಬಿಡುಗಡೆಗೊಂಡಾಗ ಸಂಭ್ರಮಾಚರಣೆ ಮಾಡಿದ್ದರು. ಯುವಕರ ಕೈಗೆ ಬಂದೂಕು ನೀಡಿ ಅವರನ್ನು ಭಯೋತ್ಪಾದಕರನ್ನಾಗಿ ಮಾಡಲು ಹೊರಟಿರುವ ವಿಡಿಯೊ ವೈರಲ್ ಆಗಿದೆ. ಸಮಾಜದ ಶಾಂತಿ ಕದಡುವ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಮುಖಂಡರಾದ ಶಿವಣ್ಣ, ಕೆ.ವಿ.ದೇವೇಂದ್ರ, ಶಿವಮೂರ್ತಿ ಶಂಕರಾಪುರ, ಶಿವರಾಜ ಅರಸನಕೆರೆ, ಚಿಕ್ಕಲಿಂಗಯ್ಯ, ಪ್ರದೀಪ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.