ಮೈಸೂರು: ‘ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡಲು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ನಿರ್ಧರಿಸಿದೆ’ ಎಂದು ಸಮಿತಿಯ ಮುಖಂಡ ಗುರುಪ್ರಸಾದ್ ಕೆರಗೋಡು ತಿಳಿಸಿದರು.
ಇಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳ ವಿರುದ್ಧವಾಗಿರುವ ಜನ ವಿರೋಧಿ ಆಡಳಿತ ನೀಡುತ್ತಿರುವ ಬಿಜೆಪಿ ತಿರಸ್ಕರಿಸುವಂತೆ ಜನರಲ್ಲಿ ಮನವಿ ಮಾಡಲಿದ್ದೇವೆ’ ಎಂದು ಹೇಳಿದರು.
‘ಡಾ.ಬಿ.ಆರ್. ಅಂಬೇಡ್ಕರ್ ಆರಂಭಿಸಿದ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ (ಆರ್ಪಿಐ)ದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಬಿಜೆಪಿ ಬೆಂಬಲಿಸುವುದಾಗಿ ಹೇಳಿರುವುದು ದುರಂತ ಮತ್ತು ಖಂಡನೀಯ. ಹೊಟ್ಟೆಪಾಡಿಗಾಗಿ ರಾಜಕಾರಣ ಮಾಡುವುದಾದರೆ ನೇರವಾಗಿ ಬಿಜೆಪಿ ಸೇರಲಿ’ ಎಂದು ತಿರುಗೇಟು ನೀಡಿದರು.
‘ರಾಜ್ಯ ಸರ್ಕಾರ ಒಳ ಮೀಸಲಾತಿ ಘೋಷಿಸಿ ದಲಿತರನ್ನು ವಂಚಿಸಿದೆ. ಮುಸ್ಲಿಮರ ಮೀಸಲಾತಿ ಹಿಂಪಡೆದಿರುವುದು ಸಂವಿಧಾನ ವಿರೋಧಿಯಾಗಿದೆ. ಇದರ ವಿರುದ್ಧ ದಮನಿತ, ಶೋಷಿತ, ಹಿಂದುಳಿದ ಸಮಾಜ ಒಗ್ಗೂಡಬೇಕು. ಸಾಂವಿಧಾನಿಕ ಹಕ್ಕು ಕಾಪಾಡಬೇಕಾದರೆ ಕಾಂಗ್ರೆಸ್ ಬೆಂಬಲಿಸಬೇಕು’ ಎಂದು ಕೋರಿದರು.
‘ದಲಿತ ಸಮುದಾಯದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾದ ಡಾ.ಎಚ್.ಸಿ.ಮಹದೇವಪ್ಪ ಸಮಾನತೆ, ಸಾಮಾಜಿಕ ನ್ಯಾಯದ ಪರವಾದ ಗಟ್ಟಿ ಧ್ವನಿ. ನಂಜನಗೂಡು ಕ್ಷೇತ್ರದ ಸ್ಪರ್ಧೆಯಿಂದ ಹಿಂದೆ ಸರಿದು, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್.ಧ್ರುವನಾರಾಯಣ ಪುತ್ರ ದರ್ಶನ್ಗೆ ಬೆಂಬಲ ಘೋಷಿಸಿ ಪ್ರಬುದ್ಧತೆ ಮೆರೆದಿರುವ ಅವರಿಗೆ ಕಾಂಗ್ರೆಸ್ ಪಕ್ಷ ಸೂಕ್ತ ಸ್ಥಾನಮಾನ ನೀಡಬೇಕು’ ಎಂದು ಒತ್ತಾಯಿಸಿದರು.
ದಸಂಸ ರಾಜ್ಯ ಸಂಚಾಲಕ ಬಿ.ಜಿ.ಸಾಗರ್, ಮುಖಂಡರಾದ ಮಾವಳ್ಳಿ ಶಂಕರ್, ಇಂದೂಧರ ಹೊನ್ನಾಪುರ, ಎನ್.ಮುನಿಸ್ವಾಮಿ, ಎನ್. ವೆಂಕಟೇಶ್, ಅರ್ಜುನ್ ಭದ್ರ, ಜಿಗಣಿ ಶಂಕರ್, ಬೆಟ್ಟಯ್ಯಕೋಟೆ, ಚುಂಚನಹಳ್ಳಿ ಮಲ್ಲೇಶ್, ಆಲಗೂಡು ಶಿವಕುಮಾರ್, ಕಲ್ಲಹಳ್ಳಿ ಕುಮಾರ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.