ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು | ‘ಮೊಬೈಲ್‌ನಲ್ಲೇ ಚುನಾವಣಾ ಮಾಹಿತಿ ಲಭ್ಯ’

ನೀತಿಸಂಹಿತೆ ಉಲ್ಲಂಘನೆ ಕಂಡುಬಂದಲ್ಲಿ ದೂರು ನೀಡಲು ಮನವಿ
Published 19 ಮಾರ್ಚ್ 2024, 15:07 IST
Last Updated 19 ಮಾರ್ಚ್ 2024, 15:07 IST
ಅಕ್ಷರ ಗಾತ್ರ

ಮೈಸೂರು: ಲೋಕಸಭೆ ಚುನಾವಣೆಯ ಎಲ್ಲ ಪ್ರಕ್ರಿಯೆಯ ಮಾಹಿತಿಯು ಚುನಾವಣಾ ಆಯೋಗದ ವೆಬ್‌ಸೈಟ್‌ ಹಾಗೂ ಮೊಬೈಲ್‌ ಆ್ಯಪ್‌ನಲ್ಲಿ ಲಭ್ಯವಿದ್ದು, ಪ್ರತಿಯೊಬ್ಬರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿಯಿಂದ ಮಂಗಳವಾರ ಆರೋಗ್ಯ ಮತ್ತು ಕುಟುಂಬ ಇಲಾಖೆಯ ವೈದ್ಯಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರೋಗ್ಯ ಇಲಾಖೆ ವತಿಯಿಂದ ನಡೆಯುವ ಆರೋಗ್ಯ ಶಿಬಿರಗಳಲ್ಲೂ ಚುನಾವಣಾ ಜಾಗೃತಿ ಅರಿವು ಮೂಡಿಸಬೇಕು ಎಂದು ಸೂಚಿಸಿದರು.

ವೈದ್ಯರು ತಾವು ನೀಡುವ ಹೊರ ರೋಗಿಗಳ ವಿಭಾಗ ಚೀಟಿಯಲ್ಲಿ ಕಡ್ಡಾಯವಾಗಿ ಪ್ರಸ್ತುತ ಲೋಕಸಭಾ ಚುನಾವಣೆಯ ಘೋಷ ವಾಕ್ಯ ‘ಚುನಾವಣಾ ಪರ್ವ, ದೇಶದ ಗರ್ವ’ ಎಂಬ ಘೋಷವಾಕ್ಯ ಮುದ್ರಿಸಿ ಹಂಚಬೇಕು. ಜಿಲ್ಲೆಯ ಎಲ್ಲಾ ಮೆಡಿಕಲ್ ಸ್ಟೋರ್ ಗಳಲ್ಲಿ ಚುನಾವಣಾ ಜಾಗೃತಿ ಮೂಡಿಸುವ ಸಂದೇಶಗಳನ್ನು ಬಳಕೆ ಮಾಡಬೇಕು ಎಂದು ಸೂಚಿಸಿದರು.

ಸ್ವೀಪ್‌ ಸಮಿತಿಯ ಸಹಾಯಕ ನೋಡಲ್‌ ಅಧಿಕಾರಿ ಎಂ. ಶಾಂತಾ ‘ವೋಟರ್ ಹೆಲ್ಪ್‌ಲೈನ್ ಆ್ಯಪ್‌ನಲ್ಲಿ (Voter helpline app) ಮತದಾರರ ನೋಂದಣಿ, ಮತದಾನ ಗುರುತಿನ ಚೀಟಿ ತಿದ್ದುಪಡಿ ಇದ್ದರೆ, ಇವಿಎಂ ವಿವಿ ಪ್ಯಾಟ್ ಗಳ ಬಗ್ಗೆ ಹಾಗೂ ಚುನಾವಣಾ ಅಭ್ಯರ್ಥಿಗಳ ಬಗ್ಗೆ ಅರಿಯಬಹುದಾಗಿದೆ. ಸಿವಿಜಿ (CVG) ಆ್ಯಪ್‌ನಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ದೂರುಗಳಿದ್ದಲ್ಲಿ ಸಲ್ಲಿಸಬಹುದು. ದೂರು ಸಲ್ಲಿಸುವವರ ವಿವರಗಳು ಗೌಪ್ಯವಾಗಿ ಇರಲಿವೆ. ಇದರಿಂದಾಗಿ ನೈತಿಕ ಮತದಾನ ಮಾಡಲು ಪ್ರೇರೇಪಿಸಬಹುದಾಗಿದೆ ಎಂದರು.

18 ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳುವಂತೆ ತಮ್ಮ ಸುತ್ತಮುತ್ತಲಿನವರಿಗೆ ಮಾಹಿತಿ ನೀಡಿ ಎಂದರು. ಇದೇ ವೇಳೆ ವೈದ್ಯಾಧಿಕಾರಿಗಳಿಗೆ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಿ.ಸಿ. ಕುಮಾರಸ್ವಾಮಿ, ಡಿಎಲ್ ಒ ಡಾ.ಬಿ.ಬೃಂದಾ ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT