ಕೆ.ಆರ್.ನಗರ: ವಿಧಾನ ಪರಿಷತ್ ಮಾಜಿ ಸದಸ್ಯ ಟಿ.ಕೆ.ಚಿನ್ನಸ್ವಾಮಿ (94) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾದರು.
ಅವರಿಗೆ ಮೂವರು ಪುತ್ರರಿದ್ದಾರೆ. ಈಚೆಗೆ ಮನೆಯಲ್ಲಿ ಕಾಲುಜಾರಿ ಬಿದ್ದಿದ್ದ ಅವರ ತಲೆಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿನ ಕಂಠೇನಹಳ್ಳಿ ಸಾರ್ವಜನಿಕ ಸ್ಮಶಾನದಲ್ಲಿ ಶುಕ್ರವಾರ ಅಂತ್ಯಸಂಸ್ಕಾರ ನಡೆಯಿತು.
ಕೊಡಗು ಜಿಲ್ಲೆಯ ತೊರೆನೂರು ಗ್ರಾಮದವರಾದ ಅವರು, ಕೆ.ಆರ್.ನಗರ ತಾಲ್ಲೂಕಿನ ಮಳಲಿ ಗ್ರಾಮದ ಸೋದರ ಮಾವನ ಮನೆಯಲ್ಲಿದ್ದುಕೊಂಡೇ ಶಿಕ್ಷಣ ಪೂರೈಸಿದ್ದರು. ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಾಗಿ, ಸರ್ಕಾರಿ ನೌಕರರ ಸಂಘದ ನಿರ್ದೇಶಕರಾಗಿದ್ದರು.
ನಿವೃತ್ತಿ ನಂತರ 1988ರಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಧಾನಪರಿಷತ್ ಗೆ ಮೊದಲ ಬಾರಿ ಆಯ್ಕೆಯಾಗಿದ್ದರು.
ತಾಲ್ಲೂಕು ನಿವೃತ್ತ ಸರ್ಕಾರಿ ನೌಕರರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ, ಎಡತೊರೆ ಬಲಿಜ (ಬಣಜಿಗ) ಸಂಘದ ಮಹಾ ಪೋಷಕರಾಗಿ, ಇಲ್ಲಿನ ಮಹಾತ್ಮ ಗಾಂಧಿ ಉದ್ಯಾನವನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿದ್ದರು.