ಮೈಸೂರು: ‘ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ರಾಜೀನಾಮೆಯು ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ಸೂಚಿಸುತ್ತಿದ್ದು, ಸರ್ಕಾರ ರಾಜೀನಾಮೆ ಕಾರಣ ಬಹಿರಂಗಪಡಿಸಬೇಕು’ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಆಗ್ರಹಿಸಿದರು.
ಭಾನುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ದೇಶದಲ್ಲಿ ಸ್ವಾಯುತ್ತ ಸಂಸ್ಥೆಗಳು ನ್ಯಾಯ ಸಮ್ಮತವಾಗಿ ಹಾಗೂ ಪ್ರಜಾಪ್ರಭುತ್ವದ ವ್ಯಾಪ್ತಿಯೊಳಗೆ ಕಾರ್ಯನಿರ್ವಹಿಸುವುದು ಅತ್ಯಂತ ಕ್ಲಿಷ್ಟಕರವಾಗಿ ಪರಿಣಮಿಸಿದೆ’ ಎಂದು ಆಕ್ರೋಶ ವ್ಯಕ್ಪಡಿಸಿದ್ದಾರೆ.
‘ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ನಡೆದಿರುವ ಈ ವಿದ್ಯಮಾನ ಇಡೀ ಚುನಾವಣಾ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ನಡೆಸಿಕೊಳ್ಳುತ್ತಿರುವುದರ ಬಗ್ಗೆ ಅನುಮಾನ ಮೂಡಿಸಿದೆ. ಕಳೆದ ಹತ್ತು ವರ್ಷಗಳ ಚುನಾವಣೆ ಮತ್ತು ಎಲೆಕ್ಟ್ರಾನಿಕ್ ವೋಟಿಂಗ್ ಯಂತ್ರಗಳ ಬಗ್ಗೆ ಜನ ಅನುಮಾನ ಪಡುವಂತಹ ವಾತಾವರಣ ಸೃಷ್ಟಿಯಾಗಿದೆ’ ಎಂದರು.