ಮೈಸೂರು: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಘೋಷಿತ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ ತಮಗೆ ಟಿಕೆಟ್ ಘೋಷಣೆಯಾದ ನಂತರ ಪಕ್ಷದ ಸದಸ್ಯತ್ವ ಪಡೆದಿದ್ದಾರೆ.
ಬುಧವಾರ ಪಕ್ಷದ ಕಚೇರಿಯಲ್ಲಿ ಅವರು ಸದಸ್ಯತ್ವ ಪಡೆದರು. ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸಮ್ಮುಖದಲ್ಲಿ ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯ್ಕುಮಾರ್ ನೋಂದಣಿ ಪ್ರಕ್ರಿಯೆ ನಡೆಸಿದರು.
ನಂತರ ಮಾತನಾಡಿದ ದರ್ಶನ್, ‘ಪಕ್ಷದ ಸದಸ್ಯತ್ವ ಪಡೆದಿದ್ದಕ್ಕೆ ಖುಷಿಯಾಗಿದೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ತ್ಯಾಗ–ಬಲಿದಾನ ಮಾಡಿದ ಪಕ್ಷದ ಕಾರ್ಯಕರ್ತ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಕೊಡುವ ಜವಾಬ್ದಾರಿಯನ್ನು ನಿರ್ವಹಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ’ ಎಂದು ತಿಳಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್.ಧ್ರುವನಾರಾಯಣ ಅಕಾಲಿಕ ನಿಧನರಾದ್ದರಿಂದ, ನಂಜನಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಕಾನೂನು ಪದವೀಧರ ದರ್ಶನ್ಗೆ ಟಿಕೆಟ್ ನೀಡಲಾಗಿದೆ. ಅವರು ಈವರೆಗೆ ಪಕ್ಷದ ಕಾರ್ಯಕ್ರಮದಲ್ಲಾಗಲಿ ಗುರುತಿಸಿಕೊಂಡಿರಲಿಲ್ಲ. ಸದಸ್ಯತ್ವವನ್ನೂ ಪಡೆದಿರಲಿಲ್ಲ.