ಹುಣಸೂರು: ಅಡಗೂರು ಎಚ್.ವಿಶ್ವನಾಥ್ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದಾಗ, ಬಿಜೆಪಿ ಕೋಮುವಾದಿ ಪಕ್ಷ ಎಂದು ಸಾವಿರಾರು ಬಾರಿ ಟೀಕಿಸಿದ್ದರು. ಈಗ ರಾಜಕೀಯ ಆಶ್ರಯ ಮತ್ತು ಸಚಿವ ಸ್ಥಾನದ ಆಸೆಗಾಗಿ ಬಿಜೆಪಿ ಸೇರ್ಪಡೆಯಾಗಿರುವುದು ಹಾಸ್ಯಾಸ್ಪದ ವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಲೇವಡಿ ಮಾಡಿದರು.
ತಾಲ್ಲೂಕಿನ ಗಾವಡಗೆರೆ ಹೋಬಳಿ ಬಿಳಿಗೆರೆ ಗ್ರಾಮದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷದಲ್ಲಿ ನಾಲ್ಕು ದಶಕಗಳವರೆಗೆ ಎಲ್ಲಾ ಸ್ಥಾನಮಾನ ಅಲಂಕರಿಸಿದ್ದ ವಿಶ್ವನಾಥ್, ಸಂಧ್ಯಾಕಾಲದಲ್ಲಿ ಕೋಮುವಾದಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ದುರಂತ.
‘ಸಿದ್ದರಾಮಯ್ಯ ಏಕಾಂಗಿ ಎಂದು ಬಿಜೆಪಿ ಬಿಂಬಿಸುತ್ತಿದೆ. ನೂರು ದಿನಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡದ ಬಿಜೆಪಿ, ಉಪಚುನಾವಣೆಯಲ್ಲಿ ಹೇಳಿಕೊಳ್ಳಲು ಏನೂ ವಿಷಯ ಇಲ್ಲದೆ ಏಕಾಂಗಿ ಅಸ್ತ್ರ ಬಳಸುತ್ತಿದ್ದಾರೆ. ಸಿದ್ದರಾಮಯ್ಯ ಎಂದಿಗೂ ಏಕಾಂಗಿ ಅಲ್ಲ. ಅವರೊಂದಿಗೆ ಕಾಂಗ್ರೆಸ್ ಪಕ್ಷವಿದೆ, ಸದಸ್ಯರಿದ್ದಾರೆ. ಎಲ್ಲರೂ ಒಗ್ಗಟ್ಟಿನಲ್ಲಿ ಹೆಜ್ಜೆ ಹಾಕುತ್ತಿದ್ದೇವೆ’ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ರಾಜ್ಯದಲ್ಲಿ ಉಪಚುನಾವಣೆ ಫಲಿತಾಂಶ ಹೊರ ಬರುತ್ತಿದ್ದಂತೆ ರಾಜ್ಯದ ರಾಜಕೀಯ ಚಿತ್ರಣ ಬದಲಾಗಲಿದೆ. ಬಿಜೆಪಿ ಸರ್ಕಾರ ಪತನವಾಗಲಿದೆ. ನಂತರ ಹೊಸ ಸರ್ಕಾರ ರಚನೆಯಾಗಲಿದೆ. ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ಗೆ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಪ್ರಚಾರ ಸಭೆಯಲ್ಲಿ ಯು.ಟಿ.ಖಾದರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ವಿಷ್ಣುನಾದನ್, ಧರ್ಮಸೇನ, ಕೃಷ್ಣಮೂರ್ತಿ, ಸೂರಜ್ ಅರಸು, ಅನಿಲ್ ಚಿಕ್ಕಮಾದು ಮತ್ತು ಕಾಂಗ್ರೆಸ್ ಮುಖಂಡರಿದ್ದರು.