ಕೆ.ಆರ್.ನಗರ: ಆರೋಗ್ಯ ಇಲಾಖೆ ವತಿಯಿಂದ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಿಷನ್ ಇಂದ್ರಧನುಷ್ ಅಭಿಯಾನಕ್ಕೆ ಶಾಸಕ ಡಿ.ರವಿಶಂಕರ್ ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿ, ‘ಲಸಿಕೆಯಿಂದ ವಂಚಿತರಾದ ಮಕ್ಕಳಿಗೆ ಮೊದಲ ಹಂತದಲ್ಲಿ ಆಗಸ್ಟ್ 7-12, ಎರಡನೇ ಹಂತದಲ್ಲಿ ಸೆಪ್ಟೆಂಬರ್ 11- 16 ಹಾಗೂ ಅಕ್ಟೋಬರ್ 9- 14 ವರೆಗೆ ಸರ್ಕಾರದ ವತಿಯಿಂದ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆ ಹಾಕುವ ಕಾರ್ಯಕ್ರಮ ನಡೆಯಲಿದೆ. ಪೋಷಕರು ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಬೇಕು’ ಎಂದು ತಿಳಿಸಿದರು.
‘ಮಕ್ಕಳಲ್ಲಿ ಕಾಣಿಸಿಕೊಳ್ಳುವ ದಡಾರ, ರುಬೆಲ್ಲಾದಂತಹ ಮಾರಕ ಕಾಯಿಲೆಗಳನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಈ ಲಸಿಕೆ ಹಾಕಲಾಗುತ್ತದೆ. ಆರೋಗ್ಯ ಇಲಾಖೆಯ ಮೂಲಕ ಸರ್ಕಾರ ತಾಯಿ ಮತ್ತು ಮಕ್ಕಳಿಗೆ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದ್ದು ಸದ್ಬಳಕೆ ಮಾಡಿಕೊಳ್ಳಬೇಕು. ಆಸ್ಪತ್ರೆಗೆ ಅರವಳಿಕೆ ತಜ್ಞರನ್ನು ಶೀಘ್ರದಲ್ಲೇ ನಿಯೋಜನೆ ಮಾಡಲಾಗುತ್ತದೆ’ ಎಂದು ತಿಳಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕೆ.ಆರ್.ಮಹೇಂದ್ರಪ್ಪ, ಮಕ್ಕಳ ತಜ್ಞ ಚಂದ್ರಶೇಖರ್, ಪುರಸಭೆ ಸದಸ್ಯ ಕೋಳಿ ಪ್ರಕಾಶ್, ದೊಡ್ಡೇಕೊಪ್ಪಲು ಗ್ರಾ.ಪಂ. ಸದಸ್ಯ ಕೆ.ಪಿ.ಜಗದೀಶ್ ಮಾತನಾಡಿದರು.
ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರಾದ ಡಾ.ದರ್ಶನ್, ಡಾ.ಭವಾನಿ, ಡಾ.ದಿವ್ಯತಾ, ಡಾ.ಶಿವಶಂಕರ್, ಅರವಳಿಕೆ ತಜ್ಞರಾದ ಡಾ.ಸೌಮ್ಯಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸಿ.ಎಂ.ರೇಖಾ, ಹಿರಿಯ ಆರೋಗ್ಯ ನಿರೀಕ್ಷಕ ಕೆ.ವಿ.ರಮೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.