ನಂಜನಗೂಡು: ನಗರದ ವಿ.ಎ. ಬಡಾವಣೆ ನಿವಾಸಿ ಮತ್ತು ಚಾಮರಾಜನಗರ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕ ಮಾದಪ್ಪ (46) ಹೊರವಲಯದ ಹೊಸಹಳ್ಳಿ ಗೇಟ್ ಬಳಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರ ಪತ್ನಿ ಇಲ್ಲಿನ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದು, 16 ವರ್ಷದ ಪುತ್ರಿ ಇದ್ದಾರೆ.
ಇಲ್ಲಿ ಸ್ವಂತ ಮನೆಯನ್ನು ನಿರ್ಮಿಸಿದ್ದ ಅವರು, ಕೆಲವು ತಿಂಗಳಿಂದ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಮತ್ತು ಯಾರೊಂದಿಗೂ ಬೆರೆಯುತ್ತಿರಲಿಲ್ಲ ಎನ್ನಲಾಗಿದೆ.
ಸಮೀಪದ ಪೆಟ್ರೋಲ್ ಬಂಕ್ವೊಂದರಲ್ಲಿ ಕ್ಯಾನ್ನಲ್ಲಿ ಪೆಟ್ರೋಲ್ ತುಂಬಿಸಿಕೊಂಡು, ಹೊಸಹಳ್ಳಿ ಗೇಟ್ ಬಳಿಗೆ ಹೋಗಿದ್ದಾರೆ. ನಿರ್ಜನ ಪ್ರದೇಶದಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತ್ನಿ ಪೂರ್ಣಿಮಾ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಗ್ರಾಮಾಂತರ ಠಾಣೆ ಪೊಲೀಸರು ಮಾಹಿತಿ ನೀಡಿದರು.