ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ | ನೀತಿಸಂಹಿತೆ: ಕಟ್ಟುನಿಟ್ಟಿನ ಪಾಲನೆಗೆ ಸೂಚನೆ

ಅಧಿಕಾರಿಗಳ ತರಬೇತಿ ಕಾರ್ಯಾಗಾರದಲ್ಲಿ ಡಿಸಿ
Published 23 ಮಾರ್ಚ್ 2024, 5:21 IST
Last Updated 23 ಮಾರ್ಚ್ 2024, 5:21 IST
ಅಕ್ಷರ ಗಾತ್ರ

ಮೈಸೂರು: ‘ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿರುವ ಮಾದರಿ ನೀತಿಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚಿಸಿದರು.

ಮೈಸೂರು– ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಅಂಗವಾಗಿ ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಎಫ್‌ಎಸ್‌ಟಿ, ಎಸ್‌ಎಸ್‌ಟಿ ಮತ್ತು ವಿವಿಟಿ ತಂಡದ ಮುಖ್ಯಸ್ಥರಿಗೆ ಶುಕ್ರವಾರ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ತವ್ಯ ನಿರ್ವಹಿಸಬೇಕು. ಯಾವುದೇ ಲೋಪ ಉಂಟಾಗದಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.

‘ಜಿಲ್ಲೆಯಾದ್ಯಂತ ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲೂ ಅಲ್ಲಿ ಹಾದು ಹೋಗುವ ಪ್ರತಿ ವಾಹನವನ್ನೂ ಪರಿಶೀಲಿಸಬೇಕು. ಯಾವುದೇ ವಾಹನದಲ್ಲಿ ₹50 ಸಾವಿರಕ್ಕಿಂತ ಹೆಚ್ಚಿನ ನಗದು ಸಾಗಿಸುತ್ತಿರುವುದು ಕಂಡುಬಂದಲ್ಲಿ ವಶಪಡಿಸಿಕೊಳ್ಳಬೇಕು. ರಾಜಕೀಯ ಪಕ್ಷಗಳನ್ನು ಗುರುತಿರುವ ಟಿ–ಶರ್ಟ್‌, ಕ್ಯಾಪ್, ಹೆಚ್ಚಿನ ಸಂಖ್ಯೆಯ ಸೀರೆ, ಆಹಾರದ ಕಿಟ್‌ಗಳು ಮೊದಲಾದವುಗಳನ್ನು ಸಾಗಿಸುತ್ತಿರುವುದು ಕಂಡುಬಂದಲ್ಲಿ ಅವುಗಳನ್ನೂ ವಶಪಡಿಸಿಕೊಳ್ಳಬೇಕು’ ಎಂದು ಸೂಚಿಸಿದರು.

‘ಸಂಶಯವಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬೇಕು. ನೀತಿಸಂಹಿತೆ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಆದ್ಯತೆ ಕೊಡಬೇಕು ಅಭ್ಯರ್ಥಿಗಳು ಅಧಿಕೃತವಾಗಿ ಘೋಷಣೆಯಾದ ನಂತರ ಅಧಿಕಾರಿಗಳ ಕೆಲಸ ಹೆಚ್ಚಾಗಲಿದೆ. ಆಗ ಹೆಚ್ಚಿನ ನಿಗಾ ವಹಿಸಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ. ಗಾಯಿತ್ರಿ ಮಾತನಾಡಿ, ಅಧಿಕಾರಿಗಳು ಚುನಾವಣಾ ಕಾರ್ಯವನ್ನು ಯಾವುದೇ ಲೋಪ ಆಗದಂತೆ ಅತ್ಯಂತ ಜಾಗರೂಕತೆಯಿಂದ ನಿರ್ವಹಿಸಬೇಕು. ಬೇಸಿಗೆ ಕಾಲವಾದ್ದರಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿ ಆರೋಗ್ಯದ ಕಡೆಯೂ ಕಾಳಜಿ ವಹಿಸಬೇಕು’ ಎಂದು ತಿಳಿಸಿದರು.

ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ ಡಿ. ಕಂಬಣ್ಣ, ಅಬಕಾರಿ ಇಲಾಖೆಯ ಉಪಾಧೀಕ್ಷಕ ಮೋಹನ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT