ಮೈಸೂರು: ‘ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲ ಮಹಿಳೆಯರು ಗಂಡಂದಿರು ಹಾಗೂ ಮಕ್ಕಳನ್ನೂ ಕಳೆದುಕೊಳ್ಳುತ್ತಾರೆ’ ಎಂದು ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.
‘ಕಾಂಗ್ರೆಸ್ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತದೆ’ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಇಲ್ಲಿ ಸೋಮವಾರ ಪ್ರತಿಕ್ರಿಯಿಸಿದ ಯತೀಂದ್ರ, ‘ಬಿಜೆಪಿಯವರು ಕೋಮುಗಲಭೆ, ದೊಂಬಿ ಮಾಡಿಸಿ ಮಕ್ಕಳು ಸಾಯುವಂತೆ ಮಾಡುತ್ತಾರೆ. ಒಬ್ಬರಿಗೊಬ್ಬರು ಬಡಿದಾಡಿಕೊಳ್ಳುವ ಪರಿಸ್ಥಿತಿ ಸೃಷ್ಟಸುತ್ತಾರೆ’ ಎಂದು ದೂರಿದರು.
‘ಹಿಂದೂಗಳಿಗೆ ಯಾವ ಕಾಲದಲ್ಲೂ ಅನ್ಯಾಯ ಆಗಿಲ್ಲ. ಆದರೆ, ಬಿಜೆಪಿಯವರು ಸಮಾಜವನ್ನು ಜಾತಿ, ಧರ್ಮದ ಹೆಸರಿನಲ್ಲಿ ಒಡೆದು ಆಳುತ್ತಿದ್ದಾರೆ. ಯುವಕರನ್ನು ಕೋಮು ಗಲಭೆಯಲ್ಲಿ ತೊಡಗಿಸಿ ಅವರನ್ನು ನಿರುದ್ಯೋಗಿಗಳನ್ನಾಗಿ ಮಾಡುತ್ತಾರೆ’ ಎಂದು ವಾಗ್ದಾಳಿ ನಡೆಸಿದರು.
‘ಪ್ರಧಾನಿ ಮತೀಯ ಭಾವನೆ ಕೆರಳಿಸುವ ರೀತಿ ಮಾತನಾಡಿದ್ದಾರೆ. ಚುನಾವಣಾ ಆಯೋಗ ಏಕೆ ಕಣ್ಣು ಮುಚ್ಚಿ ಕುಳಿತಿದೆಯೋ ಗೊತ್ತಿಲ್ಲ’ ಎಂದು ಹೇಳಿದರು.
‘ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬರ ಬಳಿ ದೊರೆತ ₹ 2 ಕೋಟಿಯನ್ನು ಬಿಜೆಪಿಯವರು ಮೈಸೂರಿಗೆ ಸಾಗಿಸುತ್ತಿದ್ದರು ಎಂಬ ಮಾಹಿತಿ ಇದೆ. ಬಿಜೆಪಿಯವರು ಹಣ ಬಲದಿಂದ ಚುನಾವಣೆ ನಡೆಸುತ್ತಿರುವುದು ಇದರಿಂದ ಸ್ಪಷ್ಟವಾಗುತ್ತದೆ. ಹೀಗಾಗಿ, ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರದ ಎಸ್.ಬಾಲರಾಜು ಅವರನ್ನು ಅಮಾನತು ಮಾಡಬೇಕು’ ಎಂದು ಒತ್ತಾಯಿಸಿದರು.