ಮೈಸೂರು: ‘ನರೇಂದ್ರ ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಈಗ ಪದೇ ಪದೇ ದೆಹಲಿಗೆ ಹೋಗಿ ಮೋದಿ ಅವರನ್ನೇ ಭೇಟಿಯಾಗುತ್ತಿದ್ದಾರೆ’ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಟೀಕಿಸಿದರು.
ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಸರ್ಕಾರದ ವಿರುದ್ಧ ವೈಎಸ್ಟಿ, ಎಸ್ಎಎಸ್ಟಿ ಹಣ ಎಂದೆಲ್ಲಾ ಆರೋಪಿಸುತ್ತಿದ್ದಾರೆ. ವೈಯಕ್ತಿಕವಾಗಿ ಅವರ ಬಗ್ಗೆ ಬಹಳ ಗೌರವವಿದೆ. ನಾವೂ ಎಚ್ಡಿಕೆ ಟ್ಯಾಕ್ಸ್ ಎಂದೆಲ್ಲಾ ಹೆಸರು ಕೊಡಬಹುದು’ ಎಂದರು.
‘ಅವರ ರಾಜಕೀಯ ನಡೆ ಹಾಗೂ ಹಳೇ ಮೈಸೂರು ಭಾಗದಲ್ಲಿ ಅವರ ಅವಕಾಶದವಾದಿ ರಾಜಕಾರಣ ಎಲ್ಲರಿಗೂ ಗೊತ್ತಿದೆ. ಅವರ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರನ್ನೇ ಬಿಟ್ಟು ಕುಟುಂಬ ರಾಜಕಾರಣ ಮಾಡುವ ಅವರು, ಕಾಂಗ್ರೆಸ್ ಬಗ್ಗೆ ಆರೋಪಿಸುತ್ತಿದ್ದಾರೆ’ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಐಟಿ ದಾಳಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯವರು ಹತಾಶರಾಗಿದ್ದಾರೆ. ಅವರಿಗೆ ಗಾಯದ ಮೇಲೆ ಉಪ್ಪು ಸವರಿದಂತಾಗಿದೆ. ಹೀಗಾಗಿ, ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಮೋದಿ ಪರವಾದ ಅಲೆ ಇಲ್ಲ. ಅವರ ಮುಖ ನೋಡಿ ಯಾರೂ ಮತ ಹಾಕುವುದಿಲ್ಲ’ ಎಂದರು.
‘ಕೇಂದ್ರ ಬಿಜೆಪಿ ಸರ್ಕಾರವು ಕಳೆದ ಹಲವು ವರ್ಷಗಳಿಂದ ಪ್ರಬಲರ ಐಟಿ, ಇಡಿ ಮೂಲಕ ದಾಳಿ ನಡೆಸಿ, ವಿರೋಧ ಪಕ್ಷದವರನ್ನು ಹತ್ತಿಕ್ಕುವ ಕೆಲಸದಲ್ಲಿ ತೊಡಗಿದೆ. ಆ ಸಂಸ್ಥೆಗಳನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದೆ. ಗೊಂದಲ ಸೃಷ್ಟಿಸಲಾಗುತ್ತಿದೆ’ ಎಂದು ತಿಳಿಸಿದರು.