ಮೈಸೂರು: ಮಂಡ್ಯ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ಹಾಗೂ ಶಿಲಾನ್ಯಾಸ ನೆರವೇರಿಸಲು ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಭಾನುವಾರ ಬೆಳಿಗ್ಗೆ ಬಂದಿಳಿದು, ಮಧ್ಯಾಹ್ನ ಇಲ್ಲಿಂದಲೇ ತೆರಳಿದರು.
ವಿಶೇಷ ವಿಮಾನದಲ್ಲಿ ಇಲ್ಲಿಗೆ ಬಂದ ಅವರನ್ನು ಶಿಷ್ಟಾಚಾರದ ಪ್ರಕಾರ ಸ್ವಾಗತಿಸಲಾಯಿತು.
ತಮ್ಮನ್ನು ಬರಮಾಡಿಕೊಂಡ ಶಾಸಕ ಎಸ್.ಎ.ರಾಮದಾಸ್ ಅವರಿಗೆ ಮೋದಿ ಹಸ್ತಲಾಘವ ಮಾಡಿ ಕುಶಲೋಪರಿ ವಿಚಾರಿಸಿದರು. ಕೈಕುಲುಕಿ ಹೇಗಿದ್ದೀರಿ? ತಮ್ಮನ ಕುಟುಂಬ ಹೇಗಿದೆ, ಎಲ್ಲರೂ ಕ್ಷೇಮವೇ ಎಂದು ಕೇಳಿ ಬೆನ್ನು ತಟ್ಟಿ ಪ್ರೀತಿಯಿಂದ ಮಾತನಾಡಿಸಿದರು.
ಮೈಸೂರು ಮೇಯರ್ ಶಿವಕುಮಾರ್, ಉಪ ಮೇಯರ್ ಡಾ.ಜಿ.ರೂಪಾ ಯೋಗೇಶ್, ಚಾಮರಾಜ ಕ್ಷೇತ್ರದ ಶಾಸಕ ಎಲ್. ನಾಗೇಂದ್ರ, ನಂಜನಗೂಡು ಕ್ಷೇತ್ರದ ಶಾಸಕ ಬಿ.ಹರ್ಷವರ್ಧನ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮತ್ತು ಬಿಜೆಪಿ ಮುಖಂಡರು ಇದ್ದರು.
ಅಲ್ಲಿಂದ ಭಾರತೀಯ ವಾಯುಸೇನೆಯ ಹೆಲಿಕಾಪ್ಟರ್ನಲ್ಲಿ ಮಂಡ್ಯದ ಪಿಇಎಸ್ ಕಾಲೇಜು ಹೆಲಿಪ್ಯಾಡ್ಗೆ ತೆರಳಿದರು. ಮೈಸೂರು–ಬೆಂಗಳೂರು ದಶಪಥ ಹೆದ್ದಾರಿಯನ್ನು ಲೋಕಾರ್ಪಣೆಗೊಳಿಸಿ, ರೋಡ್ ಶೋ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಂಡು ಮಧ್ಯಾಹ್ನ ಹೆಲಿಕಾಪ್ಟರ್ನಲ್ಲಿ ಇಲ್ಲಿನ ವಿಮಾನನಿಲ್ದಾಣಕ್ಕೆ ವಾಪಸಾದರು. ಇಲ್ಲಿಂದ ಅವರಿಗೆ ಬೀಳ್ಕೊಡಲಾಯಿತು. ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇದ್ದರು.