ಊಟಿಯಲ್ಲಿ ಮೂರು ದಿನಗಳ ವಿಶ್ರಾಂತಿ ಬಳಿಕ ಮೈಸೂರು ಪ್ರವಾಸ ಕೈಗೊಂಡಿರುವ ಅವರು, ವಿಮಾನನಿಲ್ದಾಣದಿಂದ ನೇರವಾಗಿ ಬಂದು ಇಲ್ಲಿನ ಗನ್ಹೌಸ್ ವೃತ್ತ ಸಮೀಪದ ಬಸವೇಶ್ವರ ಉದ್ಯಾನದಲ್ಲಿರುವ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಅವರೊಂದಿಗೆ ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಪಾಲ್ಗೊಂಡಿದ್ದರು.
ಶಾಸಕರಾದ ಕೆ.ಹರೀಶ್ ಗೌಡ, ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ಪ್ರಸಾದ್, ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಮುಡಾ ಅಧ್ಯಕ್ಷ ಕೆ.ಮರೀಗೌಡ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ಖಾನ್, ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಜೆ.ವಿಜಯ್ಕುಮಾರ್, ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಬಸವ ಬಳಗಗಳ ಒಕ್ಕೂಟದ ಅಧ್ಯಕ್ಷ ಎಂ.ಪ್ರದೀಪ್ಕುಮಾರ್, ಮುಖಂಡರಾದ ಮಾರ್ಬಳ್ಳಿ ಕುಮಾರ್, ಜೆ.ಜೆ. ಆನಂದ್ ಭಾಗವಹಿಸಿದ್ದರು.
ಲೋಕಸಭಾ ಚುನಾವಣೆ ಮಾದರಿ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಜಯಂತಿ ಆಚರಣೆ ಕಾರ್ಯಕ್ರಮವನ್ನು ಸರಳವಾಗಿ ನಡೆಸಲಾಯಿತು. ವಿವಿಧ ಸಂಘ–ಸಂಸ್ಥೆಗಳ ಪ್ರತಿನಿಧಿಗಳು ಪುತ್ಥಳಿಗೆ ನಮನ ಸಲ್ಲಿಸಿದರು.
‘ಚುನಾವಣೆ ನೀತಿ ಸಂಹಿತೆ ಕಾರಣದಿಂದಾಗಿ ಸರ್ಕಾರದ ವತಿಯಿಂದ ಬಸವ ಜಯಂತಿಯನ್ನು ಇಂದು ಆಚರಣೆ ಮಾಡುತ್ತಿಲ್ಲ. ಪುತ್ಥಳಿಗೆ ಮಾಲಾರ್ಪಣೆ ಮಾಡಿದ್ದೇನೆ. ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ. ಅವರ ಆದರ್ಶ–ವಿಚಾರಗಳನ್ನು ಸ್ಮರಿಸಬೇಕು, ಎಲ್ಲರೂ ಅಳವಡಿಸಿಕೊಳ್ಳಬೇಕು. ರಾಜ್ಯದ ಜನರಿಗೆ ಬಸವ ಜಯಂತಿಯ ಶುಭಾಶಯಗಳನ್ನು ಕೋರುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.