ಮೈಸೂರು: ಸರ್ಕಾರ ಭತ್ತವನ್ನು ಖರೀದಿ ಕೇಂದ್ರ ಮೂಲಕ ಖರೀದಿಸದೇ ವಿಳಂಬ ಧೋರಣೆ ಅನುಸರಿಸುತ್ತಿದೆ. ಇದರಿಂದ ಉಂಟಾಗಿರುವ ನಷ್ಟವನ್ನು ಪ್ರತಿ ಕ್ವಿಂಟಾಲ್ಗೆ ₹ 400-500 ಪರಿಹಾರ ನೀಡಿ ಭರಿಸಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಮತ್ತು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಸೋಮವಾರ ಇಲ್ಲಿ ಪ್ರತಿಭಟನೆ ನಡೆಸಿದರು.
ಕಬ್ಬಿಗೆ ಪ್ರತಿ ಟನ್ನಿಗೆ ಕನಿಷ್ಠ ₹ 800 ನಿಗದಿ ಮಾಡಬೇಕು. ಶ್ರೀ ರಾಮ ಸಕ್ಕರೆ ಕಾರ್ಖಾನೆಯನ್ನು ಶೀಘ್ರದಲ್ಲಿ ಪುನರ್ ಆರಂಭಿಸಬೇಕು ಎಂದು ಅವರು ಒತ್ತಾಯಿಸಿದರು.
ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದ ರೈತರು, ಕೂಡಲೇ ಸಭೆ ಕರೆದು ರೈತರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಅಧಿಕಾರ ಆಸೆಗಾಗಿ ರಾಜ್ಯ ನಾಯಕರು ರೆಸಾರ್ಟ್ನಲ್ಲಿ ಮಜಾ ಮಾಡುತ್ತಿದ್ದಾರೆ. ಆದರೆ, ಇತ್ತ ರೈತರು ತಾವು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೇ ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಕೀಳನಪುರ ಶಿವಣ್ಣ, ಮಾದನಹಳ್ಳಿ ಗಿರೀಶ್, ಮಾರಳ್ಳಿ ಮಂಜು ಸೇರಿದಂತೆ ಹಲವರು ಇದ್ದರು.
ಅಲೆಮಾರಿ ಜನಾಂಗದವರಿಗೆ ನಿವೇಶನ ನೀಡಲು ಒತ್ತಾಯ
ಸರ್ಕಾರಿ ಗೋಮಾಳವನ್ನು ಭೂಗಳ್ಳರಿಂದ ರಕ್ಷಿಸಿ, ಅಲ್ಲಿ ಅಲೆಮಾರಿ ಜನಾಂಗದವರಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಶ್ಯಾದನಹಳ್ಳಿ ಗ್ರಾಮಕ್ಕೆ ಸೇರಿದ ಸುಮಾರು 80ಕ್ಕೂ ಹೆಚ್ಚು ಎಕರೆ ವಿಸ್ತೀರ್ಣದ ಸರ್ಕಾರಿ ಗೋಮಾಳದಲ್ಲಿ ರೈತರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಲು ಅಧಿಕಾರಿಗಳು ಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಇಲ್ಲಿ ಶಿಳ್ಳೆಕ್ಯಾತ, ದೊಂಬಿದಾಸ, ಕೊರಮ, ಚಿನ್ನದಾಸರ್, ಹಕ್ಕಿಪಿಕ್ಕಿ ಮೊದಲಾದ 480ಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಘಟಕದ ಸಂಚಾಲಕ ಚೋರನಹಳ್ಳಿ ಶಿವಣ್ಣ, ಮುಖಂಡರಾದ ಕುಮಾರ್ ಕಲ್ಲಹಳ್ಳಿ, ನಾಗರಾಜು, ಶಿವರಾಜು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.