ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಂಜನಗೂಡು: ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

ಹಲ್ಲರೆ: ಗಲಭೆ ಪ್ರಕರಣ ಖಂಡಿಸಿ ದಲಿತ ಸಂಘಟನೆಯಿಂದ ಬೃಹತ್ ಪ್ರತಿಭಟನೆ
Published 2 ಫೆಬ್ರುವರಿ 2024, 15:34 IST
Last Updated 2 ಫೆಬ್ರುವರಿ 2024, 15:34 IST
ಅಕ್ಷರ ಗಾತ್ರ

ನಂಜನಗೂಡು: ಹಲ್ಲರೆಯಲ್ಲಿ ಅಂಬೇಡ್ಕರ್ ನಾಮಫಲಕ ಅಳವಡಿಸುವ ವಿಚಾರವಾಗಿ ದಲಿತರ ಮೇಲೆ ನಡೆದಿರುವ ಹಲ್ಲೆ ಪ್ರಕರಣ ಖಂಡಿಸಿ ನಗರದ ತಾಲ್ಲೂಕು ಕಚೇರಿ ಮುಂಭಾಗ ತಾಲ್ಲೂಕಿನ ವಿವಿಧ ದಲಿತಪರ ಸಂಘಟನೆಯ ಕಾರ್ಯಕರ್ತರು, ಮಹಿಳೆಯರು, ದಲಿತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ತಾಲೂಕಿನಾದ್ಯಂತ ಮೂರು ಸಾವಿರಕ್ಕೂ ಹೆಚ್ಚು ಪ್ರತಿಭಟನಕಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿನ ತಾಲ್ಲೂಕು ಆಡಳಿತದ ವೈಫಲ್ಯ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು.

ಹಲ್ಲರೆಯಲ್ಲಿ ಕಿಡಿಗೇಡಿಗಳು ಅಂಬೇಡ್ಕರ್ ನಾಮಫಲಕ ಅಳವಡಿಸಲು ವಿರೋಧ ವ್ಯಕ್ತಪಡಿಸಿ, ಪರಿಶಿಷ್ಟ ಜಾತಿಯವರ ಬಡಾವಣೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಮಹಿಳೆಯರು, ವೃದ್ಧರ ಮೇಲೂ ಹಲ್ಲೆ ನಡೆಸಿದ್ದಾರೆ. ಕಲ್ಲು ತೂರಿ ಬೈಕ್‍ ಹಾಗೂ ಮನೆಯ ಛಾವಣಿಗಳನ್ನು ಹಾಳುಮಾಡಿ ವಿಕೃತಿ ಮೆರೆದಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಅಂಬೇಡ್ಕರ್ ನೀಡಿರುವ ಮೀಸಲಾತಿ ಪಡೆಯುವ ಪರಿಶಿಷ್ಟ ಪಂಗಡದವರು ಅಂಬೇಡ್ಕರ್ ಅವಮಾನಿಸಿರುವುದು ಅವರ ಹೇಡಿತನಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಪ್ರತಿಭಟನಾಕಾರರು ಹರಿಹಾಯ್ದರು.

‘ನಾಮಫಲಕ ಅಳವಡಿಸುವ ಸಂಬಂಧ ಗಲಭೆ ನಡೆಯುವ ಐದು ದಿನಗಳ ಮುಂಚೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿರುವ ವಿಚಾರ ತಿಳಿದಿದ್ದರೂ ಪರಿಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಗ್ರಾ.ಪಂ ಪಿಡಿಒ ಮಹೇಶ್ ಹಾಗೂ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಸುನಿಲ್‍ ಕುಮಾರ್ ವಿಫಲರಾಗಿದ್ದಾರೆ. ಕೂಡಲೇ ಈ ಇಬ್ಬರನ್ನು ಸೇವೆಯಿಂದ ಅಮಾನತುಗೊಳಿಸಬೇಕು’ ಎಂದು ಒತ್ತಾಯಿಸಿದರು.

‘ಗಲಭೆಯಿಂದಾಗಿ ಪರಿಶಿಷ್ಟ ಜಾತಿಯ ಬಡಾವಣೆಗಳಲ್ಲಿ ಹಲವರ ಮನೆಗಳು ಹಾಗೂ ಬೈಕ್‍ಗಳು ಜಖಂಗೊಂಡಿವೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಸರ್ಕಾರದಿಂದ ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು. ಪ್ರಕರಣದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಅಮಾಯಕರ ಮೇಲೆಯೂ ಮೊಕದ್ದಮೆ ದಾಖಲಿಸಲಾಗಿದ್ದು, ಕೂಡಲೇ ಅವರನ್ನು ಪ್ರಕರಣದಿಂದ ಕೈಬಿಡಬೇಕು’ ಎಂದು ಪಟ್ಟು ಹಿಡಿದರು.

ಪ್ರತಿಭಟನಾ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಆರ್.ಲೋಕನಾಥ್ ಹಾಗೂ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಆಗಮಿಸಿದ್ದರು. ಸ್ಥಳಕ್ಕೆ ಜಿಲ್ಲಾಧಿಕಾರಿಗಳೇ ಖುದ್ದು ಆಗಮಿಸಿ ನಮ್ಮ ಅಹವಾಲು ಆಲಿಸುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದರು.

ಈ ವೇಳೆ ಮಾತನಾಡಿದ ಎಎಸ್ಪಿ ನಂದಿನಿ, ‘ಹಲ್ಲರೆಯಲ್ಲಿ ಗಲಭೆ ನಡೆದ ಅರ್ಧ ಗಂಟೆಯಲ್ಲೇ ಗಲಾಟೆಗೆ ಕಾರಣರಾದ ಹಲವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾನೂನು ರೀತಿಯ ಕ್ರಮವನ್ನು ಇಲಾಖೆ ಮಾಡಿದೆ’ ಎಂದರು.

ಅಪರ ಜಿಲ್ಲಾಧಿಕಾರಿ ಆರ್.ಲೋಕನಾಥ್ ಮಾತನಾಡಿ, ನಿಮ್ಮೆಲ್ಲರ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.

ನಮ್ಮ ಬೇಡಿಕೆಗಳನ್ನು ಮೂರು ದಿನಗಳ ಗಡುವಿನೊಳಗೆ ಇತ್ಯರ್ಥ ಮಾಡದಿದ್ದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಪ್ರತಿಭಟನಕಾರರು ಎಚ್ಚರಿಸಿದರು.

ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರಾದ ಚುಂಚನಹಳ್ಳಿ ಮಲ್ಲೇಶ್, ಶಂಕರಪುರ ಸುರೇಶ್, ಮಲ್ಲಹಳ್ಳಿ ನಾರಾಯಣ, ಕಾರ್ಯ ಬಸವಣ್ಣ, ಮಂಜು ಶಂಕರಪುರ, ಬಿ.ಎಂ.ನಾಗೇಶ್‍ರಾಜ್, ಮಾಜಿ ಮೇಯರ್ ಪುರುಷೋತ್ತಮ್, ಬಿ.ಎಸ್.ರಾಮು, ಹುರಾ ಚಂದ್ರು, ಚಿಕ್ಕಣ್ಣ ಹಗಿನವಾಳು, ಕಳಲೆ ರಾಜೇಶ್, ಬಸವಟ್ಟಿಗೆ ನಾಗೇಂದ್ರ, ತುಂಬಲ ರಾಮಣ್ಣ, ಕೋಲಾರದ ಸಂದೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT