ಮೈಸೂರು: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದಿಂದ ಕೈಗೊಂಡಿರುವ ಮೈಸೂರು- ನಂಜನಗೂಡು ಹೆದ್ದಾರಿ ವಿಸ್ತರಣೆ ಕಾಮಗಾರಿಗೆ ಸಂಬಂಧಿಸಿದಂತೆ ಸಂಸದ ಪ್ರತಾಪ ಸಿಂಹ ಶನಿವಾರ ಸ್ಥಳ ಪರಿಶೀಲನೆ ನಡೆಸಿದರು.
ಜೆಎಸ್ಎಸ್ ಕಾಲೇಜು ಬಳಿ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಈ ಹೆದ್ದಾರಿಯಲ್ಲಿ ದಸರಾ ವೇಳೆಯಲ್ಲಿ ಟ್ರಾಫಿಕ್ ಜಾಮ್ ಕಿರಿಕಿರಿಯನ್ನು ಜನರು ಅನುಭವಿಸುತ್ತಿದ್ದಾರೆ. ಇಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಲಾಗಿದ್ದು, ವಿಸ್ತರಣೆಗೆ ಯೋಜನೆ ರೂಪಿಸಲಾಗಿದೆ. ಮುಂದಿನ ದಸರಾ ವೇಳೆಗೆ ಕಾಮಗಾರಿ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ’ ಎಂದು ತಿಳಿಸಿದರು.
‘ರೇಸ್ ಕೋರ್ಸ್ನಿಂದ ಗಣಪತಿ ಸಚ್ಚಿದಾನಂದ ಆಶ್ರಮದವರೆಗೆ ಹಾಗೂ ಎಪಿಎಂಸಿ ಬಳಿಯೂ ಅಪಘಾತಗಳ ಪ್ರಮಾಣ ಹೆಚ್ಚಾಗುತ್ತಿದೆ. ಇದನ್ನು ಬ್ಲಾಕ್ ಸ್ಪಾಟ್ ಎಂದು ಗುರುತಿಸಲಾಗಿದ್ದು, ಹೆದ್ದಾರಿ ವಿಸ್ತರಣೆ ಮೂಲಕ ಪರಿಹಾರ ಕಂಡುಕೊಳ್ಳಲು ಯೋಜಿಸಲಾಗಿದೆ’ ಎಂದರು.
‘ಸಚ್ಚಿದಾನಂದ ಆಶ್ರಮದಿಂದ ರೇಸ್ಕೋರ್ಸ್ವರೆಗಿನ 1.85 ಕಿ.ಮೀ. ರಸ್ತೆ ಅಭಿವೃದ್ಧಿಗೆ ₹ 20.24 ಕೋಟಿ ಹಾಗೂ ಮಲ್ಲನಮೂಲೆ ಮಠದ ಬಳಿಯಿಂದ ತಾಂಡವಪುರದವರೆಗಿನ 1.1. ಕಿ.ಮೀ. ರಸ್ತೆ ವಿಸ್ತರಣೆಗೆ ₹ 13.48 ಕೋಟಿ ಮೊತ್ತದ ಯೋಜನೆ ರೂಪಿಸಲಾಗಿದೆ’ ಎಂದು ಮಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.