ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಈ.ಸಿ. ನಿಂಗರಾಜ ಅವರನ್ನು ವಿಪಕ್ಷ ನಾಯಕ ಆರ್. ಅಶೋಕ್ ಗುರುವಾರ ನಗರದ ಖಾಸಗಿ ಹೋಟೆಲ್ನಲ್ಲಿ ಭೇಟಿ ಮಾಡಿ ನಾಮಪತ್ರ ಹಿಂಪಡೆಯುವಂತೆ ಮನವೊಲಿಸಿದರು.
ಬಿಜೆಪಿಯು ಈ ಕ್ಷೇತ್ರದಿಂದ ನಿಂಗರಾಜ ಅವರಿಗೆ ಟಿಕೆಟ್ ಘೋಷಿಸಿತ್ತು. ಆದರೆ ನಂತರದ ಬೆಳವಣಿಗೆಯಲ್ಲಿ ಕ್ಷೇತ್ರವನ್ನು ತನ್ನ ಮೈತ್ರಿಕೂಟದ ಪಕ್ಷವಾದ ಜೆಡಿಎಸ್ಗೆ ಬಿಟ್ಟುಕೊಟ್ಟಿದೆ.
ಆದಾಗ್ಯೂ ನಿಂಗರಾಜ ಬುಧವಾರ ಬಿ ಫಾರಂ ಇಲ್ಲದೆಯೇ ನಾಮಪತ್ರ ಸಲ್ಲಿಸಿದ್ದರು.
ಗುರುವಾರ ಜೆಡಿಎಸ್–ಬಿಜೆಪಿ ಮೈತ್ರಿ ಅಭ್ಯರ್ಥಿ ವಿವೇಕಾನಂದ ಪರ ನಾಮಪತ್ರ ಸಲ್ಲಿಕೆಗೂ ಮುನ್ನ ನಿಂಗರಾಜ ಅವರನ್ನು ಅಶೋಕ್ ಭೇಟಿ ಆದರು.
ಈ ಕುರಿತು ಪ್ರತಿಕ್ರಿಯಿಸಿದ ಅಶೋಕ್, 'ನಿಂಗರಾಜ ಅವರು ನಾಮಪತ್ರ ವಾಪಸ್ ಪಡೆಯಲು ಒಪ್ಪಿದ್ದಾರೆ. ವಿವೇಕಾನಂದ ಅವರೇ ಎನ್ಡಿಎ ಮೈತ್ರಿಕೂಟದ ಒಮ್ಮತದ ಅಭ್ಯರ್ಥಿ' ಎಂದರು.
ನಾಮಪತ್ರ ಸಲ್ಲಿಕೆ: ಮಧ್ಯಾಹ್ನ 1.30ರ ಸುಮಾರಿಗೆ ಎನ್ಡಿಎ ಅಭ್ಯರ್ಥಿ ವಿವೇಕಾನಂದ ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ ಸಾಥ್ ನೀಡಿದರು.