ಮೈಸೂರು: ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅಶೋಕಪುರಂನ ಅಂಬೇಡ್ಕರ್ ಉದ್ಯಾನದ ಎದುರಿನ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದೆ.
ಸದ್ಯ ಜಯಲಕ್ಷ್ಮೀಪುರಂನ ಅವರ ನಿವಾಸ ‘ಭೀಮ ಸದನ’ದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸುತ್ತೂರು ಮಠಾಧೀಶ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ವಿವಿಧ ಕ್ಷೇತ್ರದ ಪ್ರಮುಖರು ಅಂತಿಮ ನಮನ ಸಲ್ಲಿಸಿದರು.
ಮಧ್ಯಾಹ್ನ 1ರ ನಂತರ ಅಶೋಕಪುರಂಗೆ ತರಲಾಗುವುದು. ಮಂಗಳವಾರ (ಏ.30) ಮಧ್ಯಾಹ್ನ ಸಿಲ್ಕ್ ಫ್ಯಾಕ್ಟರಿ ಬಳಿಯಲ್ಲಿರುವ ಶ್ರೀನಿವಾಸ್ ಪ್ರಸಾದ್ ಅವರ ಟ್ರಸ್ಟ್ ಜಾಗದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸಂಜೆ ಆಗಮಿಸಿ ಅಂತಿಮ ದರ್ಶನ ಪಡೆಯಲಿದ್ದಾರೆ.