ಮೈಸೂರು| ಸಕಾಲಕ್ಕೆ ಚಿಕಿತ್ಸೆ, ತಾಯಿ ಕಾರ್ಡ್: ಸೂಚನೆ

ಮೈಸೂರು: ‘ಹೆರಿಗೆ ಸಂದರ್ಭದಲ್ಲಿ ವಿಳಂಬವಾಗದಂತೆ ನೋಡಿಕೊಳ್ಳಬೇಕು. ತ್ವರಿತವಾಗಿ ಚಿಕಿತ್ಸೆ ದೊರೆಯುವಂತೆ ನಿಗಾ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಕುರಿತು ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು, ರೇಡಿಯೋಲಜಿಸ್ಟ್ಗಳಿಗೆ ನಗರದ ಖಾಸಗಿ ಹೋಟೆಲ್ನಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಚೆಲುವಾಂಬ ಆಸ್ಪತ್ರೆಯಲ್ಲಿ ಹೈರಿಸ್ಕ್ ಹೆರಿಗೆ ಪ್ರಕರಣಗಳನ್ನು ಉಳಿಸಿಕೊಂಡು, ಸಹಜ ಹೆರಿಗೆ ಪ್ರಕರಣಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸುವಂತೆ ನೋಡಿಕೊಳ್ಳಬೇಕು. ಚೆಲುವಾಂಬ ಆಸ್ಪತ್ರೆಯಲ್ಲಿ ತಿಂಗಳಿಗೆ 600 ಹೆರಿಗೆಯಾದರೆ, ಜಿಲ್ಲಾ ಆಸ್ಪತ್ರೆಯಲ್ಲಿ 60 ಕೂಡ ಆಗುವುದಿಲ್ಲ. ಹಾಗಾಗಿ, ಚೆಲುವಾಂಬ ಆಸ್ಪತ್ರೆಯ ಮೇಲಿನ ಒತ್ತಡ ಕಡಿಮೆ ಮಾಡಬೇಕು’ ಎಂದರು.
‘ಖಾಸಗಿ ಆಸ್ಪತ್ರೆಗಳಲ್ಲಿ ಗರ್ಭಿಣಿಯರು ತಪಾಸಣೆಗೆ ಬಂದಾಗ ಹಾಗೂ ಹೆರಿಗೆಯಾದ ನಂತರದಲ್ಲಿ ತಾಯಿ ಕಾರ್ಡ್ಗೆ ಕಡ್ಡಾಯವಾಗಿ ನೋಂದಣಿ ಮಾಡಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮಾಹಿತಿ ಕೊಡಬೇಕು. ಸರ್ಕಾರಿ ಆಸ್ಪತ್ರೆಗಳಿಗೆ ಬರುವವರಿಗೆ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಮೂಲಕ ತಾಯಿ ಕಾರ್ಡ್ ದೊರೆತು ಕಾಲಕಾಲಕ್ಕೆ ಆರೋಗ್ಯ ತಪಾಸಣೆ ನಡೆಯಲಿದೆ’ ಎಂದು ಹೇಳಿದರು.
‘ತಾಯಿ ಕಾರ್ಡ್ನಿಂದ ದೂರ ಉಳಿಯದಂತೆ ನೋಡಿಕೊಳ್ಳಬೇಕು. ಒಂದು ವೇಳೆ ತಾಯಿ ಕಾರ್ಡ್ ಇಲ್ಲದೆ ಏನಾದರೂ ತೊಂದರೆಯಾದಲ್ಲಿ ಸಂಬಂಧಿಸಿದ ಕಾರ್ಯನಿರತ ವೈದ್ಯರ ಮೇಲೆ ಪರಿಣಾಮ ಆಗುತ್ತದೆ’ ಎಂದು ತಿಳಿಸಿದರು.
‘ಎಚ್.ಡಿ.ಕೋಟೆ ತಾಲ್ಲೂಕಿನ ಮಹಿಳೆಯೊಬ್ಬರಿಗೆ ಹೆರಿಗೆಯ ಸಮಯದ ಮಾಹಿತಿಯನ್ನು ನೀಡಿರಲಿಲ್ಲ. ಆದರೆ, ಆಕೆಗೆ ರಾತ್ರಿ 12ರ ವೇಳೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಆಗ ಆಂಬುಲೆನ್ಸ್ ಸಿಗಲಿಲ್ಲ. ಆಶಾ ಕಾರ್ಯಕರ್ತೆ ದೂರವಾಣಿ ಕರೆ ಸ್ವೀಕರಿಸಿಲ್ಲ. ಮುಂಜಾನೆ ಆರು ಗಂಟೆಗೆ ಆಸ್ಪತ್ರೆಗೆ ಕರೆದುಕೊಂಡು ಬಂದು ಶಸ್ತ್ರಚಿಕಿತ್ಸೆ ಮಾಡುವ ವೇಳೆಗೆ ತಾಯಿ ಮೃತಪಟ್ಟಿದ್ದರು. ಹೀಗೆ... ಡೆತ್ ಆಡಿಟ್ ಮಾಡುವಾಗ ಸಾಕಷ್ಟು ವಿಚಾರಗಳು ಗೊತ್ತಾಗಿವೆ. ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಆಶಾ ಕಾರ್ಯಕರ್ತೆಯರ ಜೊತೆಗೆ ಒಂದಿಷ್ಟು ಸಮಯ ಮಾತನಾಡಿದರೆ ಇಂತಹ ಪ್ರಕರಣಗಳನ್ನು ತಪ್ಪಿಸಬಹುದಾಗಿದೆ’ ಎಂದು ಹೇಳಿದರು.
ಡಿಎಚ್ಒ ಡಾ.ಕೆ.ಎಚ್.ಪ್ರಸಾದ್ ಮಾತನಾಡಿ, ‘ನಿರೀಕ್ಷಿತ ಪ್ರಮಾಣದಲ್ಲಿ ನೋಂದಣಿ ಮತ್ತು ತಪಾಸಣೆ ಆಗದಿರುವ ಕಾರಣಕ್ಕಾಗಿ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿ 9ರಂದು ಉಚಿತ ಸೇವೆ ನೀಡಲಾಗುತ್ತದೆ. ಗರ್ಭಿಣಿಯರು ಕನಿಷ್ಠ 3 ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ತಿಳಿಸಿದರು.
ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕಿ ಡಾ.ದಾಕ್ಷಾಯಿಣಿ, ಜಿಲ್ಲಾ ಆರ್ಸಿಎಚ್ ಡಾ.ಜೆ.ಜಯಂತ್, ಡಾ.ಸಿ.ಚಿದಂಬರ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.