ಬಿಡದಿ: ಇಲ್ಲಿನ ಪುರಸಭೆ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆಯ ಅಡಿ ಕೈಗೆತ್ತಿಕೊಳ್ಳಲಾದ ಬಹುತೇಕ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿವೆ ಎಂದು ಎಂದು ಶಾಸಕ ಮಂಜುನಾಥ್ ತಿಳಿಸಿದರು.
ಪುರಸಭೆ ವ್ಯಾಪ್ತಿಯ ವಾರ್ಡ್–3ರ ಜನತಾ ಕಾಲೊನಿಯಲ್ಲಿ ಶುಕ್ರವಾರ ರೈತ ಸಂಪರ್ಕ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ₹30 ಲಕ್ಷ ವೆಚ್ಚದಲ್ಲಿ ಈ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು.
ಬಿಡದಿ ವ್ಯಾಪ್ತಿಯ ಕುಡಿಯುವ ನೀರಿನ ಯೋಜನೆಗಾಗಿ ಈಗಾಗಲೇ ₹74 ಕೋಟಿ ಅನುದಾನ ಬಿಡುಗಡೆಯಾಗಿದ್ದು ಟೆಂಡರ್ ಪ್ರಕ್ರಿಯೆ ಚಾಲ್ತಿಯಲ್ಲಿದೆ. ₹90 ಕೋಟಿ ವೆಚ್ಚದಲ್ಲಿ ಒಳಚರಂಡಿ ಕಾಮಗಾರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದರು.
ಬಿಡದಿ, ಕೇತಗಾನಹಳ್ಳಿ, ಯೋಗೇಶ್ವರ್ ಬಡಾವಣೆಯಲ್ಲಿ ರಸ್ತೆ ಹದಗೆಟ್ಟಿದ್ದು ಇದರ ದುರಸ್ತಿ ಕಾರ್ಯ ಮಾಡಲಾಗುತ್ತದೆ ಎಂದು ತಿಳಿಸಿದರು.
ಪುರಸಭೆ ವ್ಯಾಪ್ತಿಯ ಬೈರಮಂಗಲ ರಸ್ತೆ ತಿಮ್ಮೇಗೌಡನ ದೊಡ್ಡಿ ಬಳಿ ಲೋಕೋಪಯೋಗಿ ಇಲಾಖೆ ಹಾಗೂ ಬಿಡಿದಿ ಕೈಗಾರಿಕೆಗಳ ಸಂಘಕ್ಕೆ ಸೇರಿದ ಏಳು ಎಕರೆಯಲ್ಲಿ ಕ್ರೀಡಾಂಗಣ ನಿರ್ಮಿಸಲಾಗುತ್ತದೆ ಎಂದು ತಿಳಿಸಿದರು.
ನೂತನವಾಗಿ ಇಂದಿರಾ ಕ್ಯಾಂಟೀನ್ ತೆರೆಯಲು ಯೋಜನೆ ಹಾಕಿಕೊಳ್ಳಲಾಗಿದೆ. ಬಿಡದಿ ಆಸ್ಪತ್ರೆ ಬಳಿ ಕ್ಯಾಂಟೀನ್ ತೆರೆಯಲು ಯೋಜಿಸಲಾಗಿದ್ದು, ಇದಕ್ಕೆ ಜಾಗ ನೀಡುವಂತೆ ಕೋರಲಾಗಿದೆ ಎಂದು ಹೇಳಿದರು.
ಕಸ ವಿಲೇವಾರಿ ಕುರಿತು ಕಳೆದ ಬಾರಿ ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ. ಜೊತೆಗೆ ಬಿಡದಿ ಸಾಮಾನ್ಯ ಸಭೆಯ ಕಟ್ಟಡ ನಿರ್ಮಾಣಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ. ಎಂದು ತಿಳಿಸಿದರು.
ಈ ವೇಳೆ ಬಿಡದಿ ಪುರಸಭೆ ಅಧ್ಯಕ್ಷೆ ವೆಂಕಟೇಶಮ್ಮ ರಾಮಕೃಷ್ಣಯ್ಯ, ಪುರಸಭೆ ಸದಸ್ಯರಾದ ರಮೇಶ್, ದೇವರಾಜ್, ಪೌರಾಯುಕ್ತ ಚೇತನ್ ಕೊಳವಿ, ರೂಪೇಶ್ ಇದ್ದರು.