ಶಿವಮೊಗ್ಗ: ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಡಿ.21ರ ಬೆಳಿಗ್ಗೆ 10ಕ್ಕೆ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತ ಸಂಘದ ಸಂಸ್ಥಾಪಕ ಎನ್.ಡಿ.ಸುಂದರೇಶ್ ಅವರ ನೆನಪಿನ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ತಿಳಿಸಿದರು.
ಎನ್.ಡಿ. ಸುಂದರೇಶ್ ನೆನಪಿನ ಜತೆಗೆ ರೈತರಿಗೆ ನ್ಯಾಯ ಸಿಗಬೇಕೆಂದು ಹೋರಾಟ ಮಾಡಿ ಪೊಲೀಸರ ಗುಂಡಿಗೆ ಬಲಿಯಾಗಿ ಹುತಾತ್ಮರಾದ ಸುಮಾರು 153 ರೈತರನ್ನು ನೆನಪು ಮಾಡಿಕೊಂಡು ಅವರು ಬಿಟ್ಟುಹೋದ ಹೋರಾಟವನ್ನು ಮುಂದುವರೆಸಬೇಕಾಗಿದೆ ಎಂದು ಗುರುವಾರ ಪತ್ರಿಕಾಗೊಷ್ಠಿಯಲ್ಲಿ ಹೇಳಿದರು.
ರೈತ ಸಂಘದ ಹೋರಾಟದ ಫಲವಾಗಿಯೇ ತುಂಗಾ ಏತ ನೀರಾವರಿ ಕಾರ್ಯ ಪೂರ್ಣಗೊಂಡಿದೆ. ಹಾಗೆಯೇ ಉಳಿದಿರುವ ಏತ ನೀರಾವರಿ ಯೋಜನೆಗಳು ಜಾರಿಯಾಗಬೇಕಾಗಿದೆ. ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು.
ರಾಜ್ಯದಲ್ಲಿ ರೈತರ ಸ್ಥಿತಿ ಕಂಗೆಟ್ಟಿದೆ. ಅತಿವೃಷ್ಟಿ, ಅನಾವೃಷ್ಟಿಗೆ ರೈತರು ಬಲಿಯಾಗಿದ್ದಾರೆ. ಗ್ರಾಮಗಳೇ ಕೊಚ್ಚಿಹೋಗಿವೆ. ಪುನರ್ ವಸತಿ ಇನ್ನೂ ಆರಂಭವಾಗಿಲ್ಲ. ಬ್ಯಾಂಕುಗಳು, ಖಾಸಗಿ ಫೈನಾನ್ಸ್ಗಳು ಬಲವಂತವಾಗಿ ಸಾಲ ವಸೂಲಾತಿ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಆರೋಪಿಸಿದರು.