ಶಿವಮೊಗ್ಗ: ಹಾಸ್ಟೆಲ್ಗಳಲ್ಲಿ ರೋಸ್ಟರ್ ಪದ್ಧತಿಯಂತೆ ಸೀಟು ಹಂಚಿಕೆ ಮಾಡದೆ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಎನ್ಎಸ್ಯುಐ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಮೂಲ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ನಡೆಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಹಾಸ್ಟೆಲ್ಗಳ ಸೀಟು ಹಂಚಿಕೆಯಲ್ಲಿ ಅನ್ಯಾಯ ನಡೆದಿದೆ. ನಿಯಮದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೇರಿದ ಹಾಸ್ಟೆಲ್ಗಳಲ್ಲಿ ಶೇ 25ರಷ್ಟು ಸೀಟುಗಳನ್ನು ಪರಿಶಿಷ್ಟ ವಿದ್ಯಾರ್ಥಿಗಳಿಗೆ ಮೀಸಲಿಡಬೇಕು. ಪ್ರತಿಭಾನ್ವಿತರಿಗೆ, ದೂರದ ಊರಿನ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಬೇಕು. ಈ ಯಾವ ನಿಯಮಗಳನ್ನೂ ಅನುಸರಿಸಿಲ್ಲ. ಮನಬಂದಂತೆ ಸೀಟು ಹಂಚಿಕೆ ಮಾಡಲಾಗಿದೆ ಎಂದು ದೂರಿದರು.
ಹಾಸ್ಟೆಲ್ ಪ್ರವೇಶ ಬಯಸಿರುವ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಸಂಖ್ಯೆ ಹೆಚ್ಚಿದಾಗ ಖಾಸಗಿ ಕಟ್ಟಡಗಳನ್ನು ಬಾಡಿಗೆ ಪಡೆದು ಅವಕಾಶ ಮಾಡಿಕೊಡಬೇಕು. ಪ್ರವೇಶ ಸಿಗದವರಿಗೆ ಮಾಸಿಕ ₨ 1500 ವಸತಿ ಭತ್ಯೆ ನೀಡಬೇಕು. ಆದರೆ, ಈ ಯಾವುದೇ ಕ್ರಮ ಇಲಾಖೆ ಮಾಡುತ್ತಿಲ್ಲ ಎಂದು ಆರೋಪಿಸಿದರು.
ನಗರದ ಯಾವುದೇ ಹಾಸ್ಟೆಲ್ನಲ್ಲಿ ಮೂಲಸೌಕರ್ಯ ಇಲ್ಲ. ಸರ್ಕಾರ ಪ್ರತಿ ವಿದ್ಯಾರ್ಥಿಗೆ ಊಟಕ್ಕೆ ಹೆಚ್ಚುವರಿ ಹಣ ಬಿಡುಗಡೆ ಮಾಡಿದ್ದರೂ, ಗುಣಮಟ್ಟದ ಆಹಾರ ನೀಡುತ್ತಿಲ್ಲ. ಈ ಆವಾಂತರಗಳಿಗೆ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳೇ ನೇರ ಹೊಣೆ. ಜಿಲ್ಲಾ ಹಿಂದುಳಿದ ವರ್ಗಗಳ ಅಧಿಕಾರಿಗಳು ಅವ್ಯವಸ್ಥೆ ಸರಿಪಡಿಸಬೇಕು. ಪ್ರವೇಶಾತಿ ಪಟ್ಟಿ ಪುನರ್ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.