ಶಿವಮೊಗ್ಗ:ಕಾಂಗ್ರೆಸ್, ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಅ. 16ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಎರಡೂ ಪಕ್ಷಗಳ ಹಲವು ಮುಖಂಡರು ಹಾಜರಿರುತ್ತಾರೆ.
ರವೀಂದ್ರ ನಗರ ಗಣಪತಿ ದೇವಸ್ಥಾನದಲ್ಲಿ ಬೆಳಿಗ್ಗೆ ಪೂಜೆ ಸಲ್ಲಿಸಿದ ನಂತರ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬರುವರು. ಮುಖ್ಯಮಂತ್ರಿ ಜತೆ ಸಚಿವರಾದ ಆರ್.ವಿ. ದೇಶಪಾಂಡೆ, ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ, ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಮತ್ತಿತರರು ಭಾಗವಹಿಸುವರು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು.
ಕಾಗೋಡು ತಿಮ್ಮಪ್ಪ ಅವರ ನೇತೃತ್ವದಲ್ಲಿ ಮೈತ್ರಿ ಕೂಟ ಚುನಾವಣೆ ದುರಿಸಲಿದೆ. ಮಧು ಬಂಗಾರಪ್ಪ ಗೆಲುವು ಖಚಿತ. ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಸಾಧನೆಗಳು, ಸಮ್ಮಿಶ್ರ ಸರ್ಕಾರದ ಸಾಧನೆಗಳು ಗೆಲುವಿಗೆ ವರದಾನವಾಗಲಿವೆ. ಈ ಗೆಲುವು ಬಂಗಾರಪ ಅವರಿಗೆ ಅರ್ಪಿಸಲಾಗುವುದು ಎಂದರು.
ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯ ಬಿಜೆಪಿ ಸಂಸದರು ಕೇಂದ್ರದ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ. ಕೇಂದ್ರ ಸರ್ಕಾರ ರೈತರ ಸಾಲ ಕೂಡ ಮನ್ನಾ ಮಾಡಲಿಲ್ಲ ಎಂದು ದೂರಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀ.ನ.ಶ್ರೀನಿವಾಸ್ ಮಾತನಾಡಿ, ಕಾಂಗ್ರೆಸ್ ವರಿಷ್ಠರಲ್ಲಿ ಜಿಲ್ಲೆಯ ಎಲ್ಲಾ ವಿಷಯ ಮನದಟ್ಟು ಮಾಡಿಕೊಡಲಾಗಿತ್ತು. ಅಂತಿಮವಾಗಿ ಜೆಡಿಎಸ್ಗೆ ಬಿಟ್ಟುಕೊಡಲಾಗಿದೆ. ಉಪ ಚುನಾವಣೆ ಜಿಲ್ಲೆಯ ಜನರಿಗೆ, ರಾಜಕೀಯ ಪಕ್ಷಗಳಿಗೆ ಬೇಕಾಗಿರಲಿಲ್ಲ. ಸಂಸದರಾಗಿ ಬಿ.ಎಸ್.ಯಡಿಯೂರಪ್ಪ ಅವರು 5ವರ್ಷ ಪೂರ್ಣಗೊಳಿಸಬೇಕಾಗಿತ್ತು. ಆದರೆ, ಮುಖ್ಯಮಂತ್ರಿ ಕುರ್ಚಿ ಆಸೆಗಾಗಿ ಸಂಸದ ಸ್ಥಾಪಕ್ಕೆ ರಾಜೀನಾಮೆ ನೀಡಿದ್ದರು. ಇದರ ಹೊಣೆ ಯಡಿಯೂರಪ್ಪ ಹಾಗೂ ಬಿಜೆಪಿ ಹೊರಬೇಕು ಎಂದರು.
ಸಂಸದರಾಗಿ ಯಡಿಯೂರಪ ಭರವಸೆ ಈಡೇರಿಸದೇ ಜಿಲ್ಲೆಯ ಜನರಿಗೆ ಅನ್ಯಾಯ ಮಾಡಿದ್ದಾರೆ. ಯಾವುದೇ ಯೋಜನೆ ತಂದಿಲ್ಲ. ಸಂಸದರಾಗಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ದೂರಿದರು.
ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.