ಕಲಕೇರಿ: ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡಬೇಕು, ಕುದರಗುಂಡ ಮತ್ತು ಹುಣಶ್ಯಾಳ ಕೆರೆಗಳಿಗೆ ನೀರು ತುಂಬಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಸಾರ್ವಜನಿಕರು ಇಲ್ಲಿಯ ಗ್ರಾಮ ಪಂಚಾಯಿತಿ ಕಾರ್ಯಾಲಯದ ಎದುರು ಬುಧವಾರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.
ಪ್ರಾಂತ ರೈತ ಸಂಘಟನೆ ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ ಜಮಾವಣೆಗೊಂಡು, ಅಲ್ಲಿಂದ ಮುಖ್ಯ ಬಜಾರ್ ಮಾರ್ಗವಾಗಿ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
‘ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಬೇಕು, ಅಗಸಿ ಮುಂದಿನ ಚರಂಡಿಗಳಿಗೆ ಪೈಪ್ಗಳನ್ನು ಜೋಡಿಸಬೇಕು’ ಎಂದು ಒತ್ತಾಯಿಸಿ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರಾಂತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಭೀಮಶಿ ಕಲಾದಗಿ, ಜಿಲ್ಲಾ ಘಟಕದ ಅಧ್ಯಕ್ಷ ಅಣ್ಣಾರಾಯ ಈಳಗೇರ ಮಾತನಾಡಿ, ‘ಕುಡಿಯುವ ನೀರಿಗಾಗಿ ಇಂದಿಗೂ ಹೋರಾಟ ಮಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ₹500 ರಿಂದ ₹600 ಪಾವತಿಸಿ ಟ್ಯಾಂಕರ್ ನೀರು ಪಡೆಯುವಂತಾಗಿದೆ. ಆದ್ದರಿಂದ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.
ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷೆ ಸುರೇಖಾ ರಜಪೂತ್, ಕೆಪಿಆರ್ಎಸ್ ಗ್ರಾಮ ಘಟಕದ ಅಧ್ಯಕ್ಷ ಸಲೀಂ ನಾಯ್ಕೊಡಿ, ಲಕ್ಕಪ್ಪ ಬಡಿಗೇರ, ರಮೇಶ ಹೆಂಡಿ, ರಾಜು ಅಡಕಿ, ಟಿಪ್ಪು ಸಿಪಾಯಿ, ಕಾಶಿಂ ನಾಯ್ಕೋಡಿ ಮಾತನಾಡಿದರು.
ಧರಣಿಗೆ ಟಿಪ್ಪು ಕ್ರಾಂತಿ ಸೇನೆ, ದಲಿತ ಸಂಘರ್ಷ ಸಮಿತಿ, ಸಂಗೊಳ್ಳಿ ರಾಯಣ್ಣ ಸಂಘಟನೆ, ದಲಿತ ಸೆನೆಯ ಪಧಾದಿಕಾರಿಗಳು ಬೆಂಬಲ ಸೂಚಿಸಿದರು.