ವಿಜಯಪುರ: ಅಗಸ್ತ್ಯ ಅಂತರರಾಷ್ಟ್ರೀಯ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ತಾಳಿಕೋಟೆ ತಾಲ್ಲೂಕು ತಮದಡ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಹಾಗೂ ₹ 6 ಸಾವಿರ ಬಹುಮಾನ ಪಡೆದುಕೊಂಡರು.
ವಿಜಯಪುರ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದ್ವಿತೀಯ ಸ್ಥಾನ ಹಾಗೂ ₹ 4 ಸಾವಿರ, ಅರಕೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ತೃತೀಯ ಸ್ಥಾನ ಹಾಗೂ ₹ 2 ಸಾವಿರ ಬಹುಮಾನ ಪಡೆದರು.
ಜಿಲ್ಲೆಯ 50 ಸರ್ಕಾರಿ ಶಾಲೆಗಳ 200 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. 8 ಶಾಲೆಗಳ 16 ವಿದ್ಯಾರ್ಥಿಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿತ್ತು.
ಸರ್ವ ಶಿಕ್ಷಣ ಅಭಿಯಾನದ ಸಹಾಯಕ ಯೋಜನಾ ಸಮನ್ವಯ ಅಧಿಕಾರಿ ಆರ್.ಬಿ.ಪಾಟೀಲ, ಬೇಟಿ ಬಚಾವೋ ಬೇಟಿ ಫಡಾವೋ ಜಿಲ್ಲಾ ನೋಡಲ್ ಅಧಿಕಾರಿ ನಿರ್ಮಲಾ ದೊಡ್ಡಮನಿ ಬಹುಮಾನ ವಿತರಿಸಿದರು. ಬಸವರಾಜ ರಾಮದುರ್ಗ ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು.
ಶಾಸಕ ಅರುಣ ಶಹಾಪುರ ಉದ್ಘಾಟಿಸಿದರು. ಅಗಸ್ತ್ಯ ಅಂತರರಾಷ್ಟ್ರೀಯ ತರಬೇತಿ ಕೇಂದ್ರದ ಮುಖ್ಯಸ್ಥ ಸತೀಶ ಗೋಡಕಿಂಡಿ, ಪ್ರಾದೇಶಿಕ ಮುಖ್ಯಸ್ಥೆ ಗೀತಾ ಪಾಟೀಲ, ವಿಜ್ಞಾನ ಕೇಂದ್ರದ ಮುಖ್ಯಸ್ಥೆ ಸುಮಾ ಚೌಧರಿ ಇದ್ದರು.