ಮಸ್ಕಿ (ರಾಯಚೂರು): ಕಾಂಗ್ರೆಸ್ ಪಕ್ಷದ ಅಧಿಕಾರವಿದ್ದ ಅವಧಿಯಲ್ಲಿ ಮಸ್ಕಿ ಕ್ಷೇತ್ರದ ಅಭಿವೃದ್ಧಿಗಾಗಿ ₹5 ಸಾವಿರ ಕೋಟಿ ಅನುದಾನ ನೀಡಿದ್ದೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಸಿಂಧನೂರು ತಾಲ್ಲೂಕಿನ ತುರ್ವಿಹಾಳದಲ್ಲಿ ಸೋಮವಾರ ಏರ್ಪಡಿಸಿದ್ದ ಉಪಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ನಂದವಾಡಗಿ ಏತ ನೀರಾವರಿ ಯೋಜನೆಗೆ ₹2 ಸಾವಿರ ಕೋಟಿ, ರಸ್ತೆಗಳ ಅಭಿವೃದ್ಧಿ, ಕೆರೆ ತುಂಬಿಸಲು ಮತ್ತು ಶಾಲಾ, ಕಾಲೇಜುಗಳ ನಿರ್ಮಾಣಕ್ಕಾಗಿ ಅನುದಾನ ಕೊಟ್ಟಿದ್ದರೂ ಪ್ರತಾಪಗೌಡ ಹೇಳದೆ, ಕೇಳದೆ ಪಕ್ಷ ತೊರೆದಿದ್ದಾರೆ ಎಂದರು.
'ಯಡಿಯೂರಪ್ಪ ಅವರು ಯಾವುದೇ ಅಭಿವೃದ್ಧಿ ಮಾಡಿಲ್ಲ. ಕೊಟ್ಟಿರುವ ಯೋಜನೆ ಕಿತ್ತುಕೊಳ್ಳುತ್ತಿದ್ದಾರೆ. ಕರ್ನಾಟಕ ಹಸಿವು ಮುಕ್ತ ಆಗಬೇಕು ಎಂದು 7 ಕೆಜಿ ಅಕ್ಕಿ ಕೊಟ್ಟಿದ್ದೆವು. ಆದರೆ ಯಡಿಯೂರಪ್ಪ ಅಕ್ಕಿ ಕಡಿತಗೊಳಿಸಿದ್ದಾರೆ' ಎಂದು ಟೀಕಿಸಿದರು.
ಮಸ್ಕಿ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿರುವ ಬಿ.ವೈ. ವಿಜಯೇಂದ್ರ ದುಡ್ಡು ತೆಗೆದುಕೊಂಡು ಬಂದಿದ್ದಾರೆ. ಅದು ಜನರು ತೆರಿಗೆ ಕಟ್ಟಿರುವ ಹಣವಾಗಿದೆ. ಅವರಿಂದ ಹಣ ಪಡೆದರೂ ಬಸನಗೌಡ ಅವರಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ಎಸ್.ಪಾಟೀಲ, ಮಸ್ಕಿ ವಿಧಾನಸಭೆ ಉಪಚುನಾವಣೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಮಾತನಾಡಿದರು.