ರಾಯಚೂರು: ‘ಸಮಾಜದಲ್ಲಿ ಉತ್ತಮ ನಡವಳಿಕೆ, ವೈಜ್ಞಾನಿಕ ಮನೋಭಾವ ಮತ್ತು ಜೀವನದಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸಿಕೊಂಡಾಗ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಪಾಂಡ್ವೆ ಹೇಳಿದರು.
ನಗರದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸರ್.ಸಿ.ವಿ.ರಾಮನ್ ಸಭಾಂಗಣದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಸರ್.ಸಿ.ವಿ. ರಾಮನ್ ಅವರು ಬೆಳಕಿನ ಚದುರುವಿಕೆಯ ಪರಿಣಾಮದ ಸಿದ್ಧಾಂತವನ್ನು ಮಂಡಿಸಿ ಜಗತ್ತಿನ ಗಮನ ಸೆಳೆದರು. ಆಧುನಿಕ ವಿಜ್ಞಾನದ ಹಾದಿಯಲ್ಲಿ ಮಹತ್ವ ಘಟನೆ ಇದಾಗಿದೆ. ಇದಕ್ಕಾಗಿ ಅವರಿಗೆ 1930ರಲ್ಲಿ ನೊಬೆಲ್ ಪ್ರಶಸ್ತಿ ದೊರೆತಿದೆ. ಇದರ ಸ್ಮರಣಾರ್ಥವಾಗಿ ಫೆ.28 ಅನ್ನು ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಗುತ್ತಿದೆ’ ಎಂದರು.
ರಾಯಚೂರು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಭಂಡಾರಿ, ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖಾ ಅಧಿಕಾರಿ ಡಾ.ವೈ.ಬಿ.ವಾಲ್ಮೀಕಿ, ಭಾರತ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಸಂಚಾಲಕ ಸೈಯದ್ ಹಫಿಜುಲ್ಲಾ, ವಿಜ್ಞಾನ ಕೇಂದ್ರದ ಕ್ಯುರೇಟರ್ಗಳಾದ ಅಜಿತಕುಮಾರ ಇದ್ದರು.