ದೇವಸೂಗೂರು (ಶಕ್ತಿನಗರ): ಭ್ರಷ್ಟಾಚಾರದ ನಿಗ್ರಹ ದಳಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ವಿಜಯಕುಮಾರ ಹೇಳಿದರು.
ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳ ವತಿಯಿಂದ ದೇವಸೂಗೂರು ಸೂಗೂರೇಶ್ವರ ಸ್ವಾಮಿ ದೇವಸ್ಥಾನದ ದಾಸೋಹ ಮಂಟಪದಲ್ಲಿ ಶುಕ್ರವಾರ ಏರ್ಪಡಿಸಿದ್ದ ಭ್ರಷ್ಟಾಚಾರ ನಿಗ್ರಹದಲ್ಲಿ ಸಾರ್ವಜನಿಕರ ಪಾತ್ರ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭ್ರಷ್ಟಾಚಾರ ನಿಗ್ರಹ ದಳವು ವ್ಯವಸ್ಥೆಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದಕ್ಕಾಗಿಯೇ ಸ್ಥಾಪನೆಗೊಂಡಿದೆ. ಪ್ರತಿಯೊಬ್ಬರೂ ಸರ್ಕಾರದ ಯೋಜನೆಗಳ ನಿರ್ವಹಣೆಯ ಕಾರ್ಯವಿಧಾನದ ಬಗ್ಗೆ ತಿಳಿದುಕೊಂಡಿರಬೇಕು. ಅಧಿಕಾರಿಗಳಿಂದ ತೊಂದರೆಗೊಳಗಾದ ಸಾರ್ವಜನಿಕರು, ದೂರನ್ನು ನೀಡಲು ಹಿಂಜರಿಯಬಾರದು ಎಂದು ಹೇಳಿದರು.
ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಸಿಪಿಐ ವಿ.ಎಂ.ಮಠಪತಿ, ಸೂಗೂರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹಂಪನಗೌಡ ಪೊಲೀಸ್ ಪಾಟೀಲ್, ಮುಖ್ಯ ಅಧಿಕಾರಿ ಪಿ.ಶಾಂತಮ್ಮ, ದೇವಸೂಗೂರು ಗ್ರಾಮ ಪಂಚಾಯಿತಿ ಸದಸ್ಯರಾದ ವೆಂಕಟೇಶ, ಅರಳಪ್ಪ , ಚನ್ನಪ್ಪ ಮಡಿವಾಳ, ಸೂಗೂರೇಶ ತಮ್ಮುಡು ಇದ್ದರು.